The Mysore Post

Thursday December 27, 2007

ಒಬ್ಬ ಐರಿಷ್ ಹುಡುಗನ ಅಲೆದಾಟ

white-blossom-tree.jpg

ಕತೆಯ ಆಶೆಯನ್ನು ಬಿಟ್ಟು ಮತ್ತೆ ಸುಮ್ಮನೇ ತಿರುಗಾಟ ಶುರು ಮಾಡಿದ್ದೆ. ಏನು ಬರೆಯಲು ಹೊರಟರೂ ಮತ್ತೆ ಅದೇ ಬಾಲ್ಯಾಕಾಲದ ಹಾವಳಿ ಜಾಸ್ತಿಯಾಗಿ. ಹಳೆಯದ್ದನ್ನೆಲ್ಲ ಮೂಟೆಕಟ್ಟಿ ಅಟ್ಟದಲ್ಲಿಟ್ಟು ಇಲ್ಲಿಗೆ ಬಂದರೂ ಬಾಲ್ಯದ ಕಾಟ ಕಡಿಮೆಯಾಗಲಿಲ್ಲವಲ್ಲಾ ಎಂದು ನಿಟ್ಟುಸಿರು ಬಿಡುತ್ತಿದ್ದೆ. ಊರಲ್ಲಿರುವ ಮಡದಿ ಕಾಗದ ಬರೆದು `ನೀನು ಗೊತ್ತೇ ಇಲ್ಲದ ಅಪರಿಚಿತ ಅಂತ ಅನ್ನಿಸುತ್ತಿದೆ. ನೀನು ಬೇರೆ ಯಾರೋ ಗಂಡಸು ಅಂತ ಅನ್ನಿಸಿ ಹೆದರಿಕೆಯಾಗುತ್ತಿದೆ. ನಿಜಕ್ಕೂ ನೀನು ಯಾರೂ ? ನನಗೆ ಯಾಕೋ ನೀನು ಎಲ್ಲೋ ಇರುವ ಬೇರೆ ಯಾರೋ ಮನುಷ್ಯ ಅಂತ ಅಳುಬರುತ್ತಿದೆ’ ಅಂತೆಲ್ಲಾ ಬರೆದಿದ್ದಳು. ಅವಳಿಗೆ ಸಮಾಧಾನ ಮಾಡಲು ಹೋಗದೆ ನಾನೂ ದುಷ್ಟನಂತೆ ಉತ್ತರ ಬರೆದಿದ್ದೆ. ಆಮೇಲೆ ನನ್ನೊಳಗೇ ಸಂಕಟಪಟ್ಟಿದ್ದೆ. ಹೆಂಡತಿಯೊಬ್ಬಳ ಹೆದರಿಕೆಗಳು, ಗಂಡನಾದವನ ದಿಕ್ಕು ದೆಸೆಯಿಲ್ಲದ ತಿರುಗಾಟ… ಇದರ ನಡುವೆಯೇ ಕಳೆದು ಹೋಗುತ್ತಿರುವ ಕಾಲ. ನಾವು ಇದನ್ನೆಲ್ಲ ಮರೆತು ಮಕ್ಕಳ ಹಾಗೆ ಮತ್ತೆ ಕೂಡಿಕೊಳ್ಳುವುದು ಹೇಗೆ ಎಂದು ಯೋಚಿಸುತ್ತಿದ್ದೆ.

ಷಿಲ್ಲಾಂಗಿನಲ್ಲಿ ಈಗ ಚಳಿಯ, ಬೆಳದಿಂಗಳಿನ ಸಮಯ. ಎಲ್ಲರೂ ಬೆಚ್ಚಿನ ಬಟ್ಟೆಗಳನ್ನು ಹಾಕಿಕೊಂಡು ಬೇರೆಯದೇ ತರಹ ಕಾಣಿಸುತ್ತಿದ್ದಾರೆ. ಚಿರಾಪುಂಜಿಯ ಕಿತ್ತಳೆಯ ಹಣ್ಣು ಮಾರುಕಟ್ಟೆಗೆ ಬಂದಿದೆ. ಎಲ್ಲರೂ ಮನೆಗಳನ್ನು ತೊಳೆದು ಸಿಂಗರಿಸಲು ತೊಡಗಿದ್ದಾರೆ. ಎಲ್ಲರೂ ಕ್ರಿಸ್‌ಮಸ್ ಹಬ್ಬಕ್ಕಾಗಿ ಕಾಯುತ್ತಿದ್ದಾರೆ

ಈ ನಡುವೆ ಓವನ್ ಓ’ ಸಲ್ಲಿವನ್ ಎಂಬ ಅಯರ್ಲೆಂಡ್‌ನ ಗೆಳೆಯ ಕಾಗದ ಬರೆದಿದ್ದಾನೆ. ಸೈಕಲ್ಲು ಹತ್ತಿ ವಿಶ್ವವನ್ನೆಲ್ಲ ಸುತ್ತುತ್ತಿರುವ ಈತ ಈಗ ಯೂರೋಪಿನ ಗಡಿಯಲ್ಲಿರುವ ಟರ್ಕಿ ಗೆ ತಲುಪಿ ಅಲ್ಲಿಂದ ಕಾಗದ ಕಳಿಸಿದ್ದಾನೆ. ಕ್ರಿಸ್‌ಮಸ್ ಹಬ್ಬಕ್ಕೆ ಸರಿಯಾಗಿ ಆತ ಅಟ್ಲಾಂಟಿಕ್ ಕಡಲ ತೀರದಲ್ಲಿರುವ ತನ್ನ ಹಳ್ಳಿಯಲ್ಲಿ ತಂದೆ ತಾಯಿಯ ಜೊತೆ ಕಾಲ ಕಳೆಯುತ್ತಾನೆ. ಈಗ ನಾನು ಯೂರೋಪಿನ ಹೊಸ್ತಿಲಲ್ಲಿ ನಿಂತಿದ್ದೇನೆ ಎಂದು ಆತ ಬರೆದಿದ್ದಾನೆ. ಇಂಗ್ಲಿಷಿನಲ್ಲಿ ಈತನ ಹೆಸರು ಓವೆನ್ ಆಂತ. ಐರಿಷ್ ಭಾಷೆಯಲ್ಲಿ ಅದನ್ನು ಓಐನ್ ಅಂತ ಬರೆಯುತ್ತಾರಂತೆ.

ಈತನನ್ನು ನಾನು ನೋಡಿದ್ದು ಒಂದು ತಮಾಷೆಯ ಸಂದರ್ಭ. ಒಂದು ವರ್ಷದ ಹಿಂದೆ ಶಿಲ್ಲಾಂಗಿನ ಅಸ್ಸಾಮಿ ಹೆಂಗಸೊಬ್ಬಳ ಮುರುಕು ಹೋಟೆಲಲ್ಲಿ ಕುಳಿತುಕೊಂಡು ಈತ ಹಾಲಿಲ್ಲದ ಟೀ ಕುಡಿದುಕೊಂಡು ಸಿಗರೇಟು ಸೇದಿಕೊಂಡು ಹೊರಗೆ ನೋಡುತ್ತಿದ್ದ. ಆಗ ಬೆಳ್ಳಗಿನ ಹೂ ಬಿಡುವ ಪ್ಲಂ ಮರಗಳು ಎಲ್ಲ ಕಡೆ ಅರಳಿಕೊಂಡು ನಿಂತಿದ್ದವು. ನಾನೂ ಟೀ ಕುಡಿದುಕೊಂಡು ಈತನನ್ನೇ ಗಮನಿಸುತ್ತಿದ್ದೆ. ಬೆಳ್ಳಗ್ಗೆ ಎತ್ತರಕ್ಕೆ ಲಕ್ಷಣವಾಗಿ ಇದ್ದ. ಜೊತೆಗೆ ವಿಲಕ್ಷಣವಾಗಿ ಮೂಗಿಗೊಂದು ನತ್ತು ಸಿಕ್ಕಿಸಿಕೊಂಡಿದ್ದ. ನನಗೆ ಅದನ್ನು ನೋಡಿ ನಗುಬರುತ್ತಿತ್ತು. ಅಸ್ಸಾಮಿ ಹೆಂಗಸು ಹೋಟೆಲ್ಲಿನ ಗೋಡೆಯಲ್ಲಿ ಜಡೆಸ್ವಾಮಿಯೊಬ್ಬನ ಫೋಟೋ ತೂಗುಹಾಕಿ ಅದಕ್ಕೆ ಊದು ಬತ್ತಿ ಹಚ್ಚಿ ಇಟ್ಟಿದ್ದಳು. ಈತ ಎದ್ದು ನನ್ನ ಬಳಿ ಬಂದು ಆ ಫೋಟೋ ತೋರಿಸಿ ಇದು ಯಾವ ದೇವರು ಅಂತ  ಕೇಳಿದ. ನನಗೂ ಗೊತ್ತಿರಲಿಲ್ಲ. `ಕ್ಷಮಿಸುಗೊತ್ತಿಲ್ಲ’ ಅಂತ ಹೇಳಿದೆ. ಆಮೇಲೆ ನಾವು ಗೆಳೆಯರಾದೆವು. ನಮ್ಮ ಮನೆಗೆ ಬಂದು ಊಟ ಮಾಡಿ ಕುಡಿದು ಊರಿನಿಂದ ಬಂದ ನೆಂಟನಂತೆ ಕ್ಷೇಮ ಸಮಾಚಾರ ಮಾತಾಡಿಕೊಂಡು ಹತ್ತಿರವಾದೆವು. ಹೋಗಲಿ ಬಿಡು ಮೂಗಿಗೆ ನತ್ತು ಯಾಕೆ ಹಾಕಿಕೊಂಡಿದ್ದೀಯಾ ಅಂತ ಕೇಳಿದೆ. ಎಲ್ಲರೂ ಕುತೂಹಲ ಪಡಲಿ, ಮಕ್ಕಳು ನಗಾಡಲಿ ಅಂತ ಹಾಕಿರುವೆ’ ಅಂತ ಹೇಳಿದ.

ಈತ ಹುಟ್ಟಿದ್ದು ಐರ್ಲೆಂಡಿನಲ್ಲಿ ನಲ್ಲಿ. ಕೆಲಸ ಮಾಡುವುದು ಆಸ್ಟ್ರೇಲಿಯಾದಲ್ಲಿ. ಒಂದು ವರ್ಷ ಕೆಲಸ ಮಾಡಿ ಖರ್ಚು ಮಾಡದೆ ಹಣ ಉಳಿಸಿ ಇನ್ನೊಂದು ವರ್ಷ ರಜೆ ಹಾಕಿ ಲೋಕ ಸುತ್ತುತ್ತಾನೆ. ಆಸ್ಟ್ರೇಲಿಯಾದಿಂದ ಹಾಂಕಾಂಗ್‌ಗೆ ಹೋಗಿ, ಅಲ್ಲಿಂದ ಬಿಹಾರ ಸುತ್ತಿ, ಕಲಕತ್ತಾಗೆ ಬಂದು ಅಲ್ಲಿಂದ ಬಾಂಗ್ಲಾದೇಶದೊಳಕ್ಕೆ ನುಸುಳಿ ತ್ರಿಪುರಾದ ಗಡಿಯಲ್ಲಿ ಪುನಃ ಭಾರತದೊಳಕ್ಕೆ ಬಂದು ಬಸ್ಸು ಹತ್ತಿ ಶಿಲ್ಲಾಂಗಿಗೆ ಬಂದಿದ್ದ. ಈ ಊರಲ್ಲಿ ಐರಿಷ್ ಪಾದ್ರಿಗಳ ತುಂಬಾ ಗೋರಿಗಳಿವೆ ನೋಡಿಕೊಂಡು ಹೋಗೋಣ ಅಂತ ಬಂದೆ ಅಂತ ಹೇಳಿದ್ದ. ನಮ್ಮ ಜೊತೆ ಎರಡು ದಿನ ಪ್ರೀತಿಯಿಂದ ಇದ್ದು ಆಮೇಲೆ ಪುನಃ ನೇಪಾಳಕ್ಕೆ ಹೊರಟು ಹೋದ. ನೇಪಾಳದಿಂದ ಕಾಗದ ಬರೆದಿದ್ದ. ಅಲ್ಲಿ ಒಂದು ಹಳೆಯ ಸೈಕಲ್ಲು ಕೊಂಡು ಅದನ್ನು ಹತ್ತಿ ಭಾರತ ದಾಟಿ ಪಾಕಿಸ್ತಾನ, ಕಾಬೂಲ್, ಇರಾನ್‌ಗಳನ್ನು ಹಾದು ಈಗ ಟರ್ಕಿಯ ಬಳಿಯಿಂದ ಇನ್ನೊಂದು ಕಾಗದ ಬರೆದಿದ್ದಾನೆ.

`ಯಾಕೆ ಮಾರಾಯ ಇಷ್ಟೊಂದು ಸುತ್ತುತ್ತೀಯಾ?’ ಅಂತ ಕೇಳಿದ್ದೆ. ಸುಮ್ಮನೇ ಕಣ್ಣು ಮಿಟುಕಿಸಿದ್ದ. ನೋಡಿದರೆ ಆತನಿಗೆ ನನಗಿಂತ ಸಣ್ಣ ವಯಸ್ಸು. ಮದುವೆಯಾದ ಮೇಲೆ ಸುತ್ತುವುದನ್ನ ನಿಲ್ಲಿಸುತ್ತೇನೆ ಅಂತ ನನ್ನ ಮಡದಿಯನ್ನು ನೋಡಿ ಚೇಷ್ಟೆ ಮಾಡಿದ್ದ. ನಿಮ್ಮ ದೇಶದ ಕವಿ ಏಟ್ಸ್ ಗೊತ್ತಾ ಅಂತ ಕೇಳಿದ್ದೆ. ಗೊತ್ತು ಓದಿಲ್ಲ ಅಂತ ಹೇಳಿದ್ದ. ನನಗೆ ಕವನ ಬರೆಯುವುದು ಹೇಗೆ ಅಂತ ಹೇಳಿಕೊಡು ಅಂತ ಕೇಳಿದ್ದೆ. ತಮಾಷೆ ಮಾಡಬೇಡ ಅಂತ ಹೇಳಿದ್ದೆ. ನಾನು ನನ್ನ ಹೆಂಡತಿ ಇಬ್ಬರೂ ಸೇರಿ ನಾವು ಪ್ರೇಮಿಸಿದ್ದು ಮದುವೆಯಾಗಿದ್ದು ಎಲ್ಲವನ್ನೂ ಆತನಿಗೆ ಕತೆ ಹೇಳುವ ಹಾಗೆ ಹೇಳಿದ್ದೆವು. `ನನಗೆ ಆತ ತುಂಬಾ ಇಷ್ಟ ಆದ. ಸ್ಮಾರ್ಟ್ ಇದ್ದಾನೆ’ಅಂತ ಆಕೆ ನನ್ನ ಕಿವಿಯಲ್ಲಿ ಹೇಳಿದ್ದರು. ಅದನ್ನು ನಾನು ಅವನಿಗೆ ಹೇಳಿ ಅವನು ಕೆಂಪಗಾಗಿ ಬಿಟ್ಟಿದ್ದ.

ನಾವೆಲ್ಲಾ ಹೀಗೆಲ್ಲಾ ಸುತ್ತುವುದು ಯಾವಾಗ ? ನನ್ನ ಗೆಳೆಯನೊಬ್ಬ ಮೊನ್ನೆ ಬಾಬಾ ಬುಡನ್‌ಗಿರಿಗೆ ಹೋಗಬೇಕಿದ್ದವನು ಅಯ್ಯೋ ಅಲ್ಲಿ ಚಳಿ ಅಂತ ಹೋಗದೆ ಮಂಗಳೂರಿನಲ್ಲಿ ಮನೆಯಲ್ಲೇ ಉಳಿದುಬಿಟ್ಟಿದ್ದ.
ಯಾಕೋ ಈ ಸಲ ತುಂಬಾ ಜಾಸ್ತಿಯೇ ಬರೆದೆ. ನಿಲ್ಲಿಸುವೆ.

Thursday December 20, 2007

ಈವತ್ತು ಊರಲ್ಲಿ ದೊಡ್ಡ ಪೆರುನಾಳ್

Filed under: ಹಾಡು-ಪಾಡು — Rasheed @ 10:17 pm

ಈವತ್ತು ಊರಲ್ಲಿ ದೊಡ್ಡ ಪೆರುನಾಳ್ ಅಂದರೆ ಬಕ್ರೀದ್. ಅಮ್ಮ ಕರೆದಿದ್ದಾರೆ. ಎಂದಿನಂತೆ ಹೋಗಲಾಗದೆ ಕೂತಿದ್ದೇನೆ.ನನಗೆ ಯಾವಾಗಲೂ ಹೀಗೆಯೇ .ಅಲ್ಲಿ ಹೋಗಲಾರೆ.ಇಲ್ಲಿ ಇರಲಾರೆ. ಕವಿತೆ ಬೇಕಾದರೆ ಬರೆಯಬಲ್ಲೆ! ಸುಮಾರು ೨೨ ವರ್ಷಗಳ ಹಿಂದೆ  ಹಬ್ಬಕ್ಕೆ ಹೋಗದೆ ಕಳ್ಳ ಕೆಲಸಗಳ ನಡುವೆ ಬರೆದ ಕವಿತೆಯನ್ನು ಇಲ್ಲಿ ಪೋಸ್ಟ್ ಮಾಡುತ್ತಿರುವೆ.

ಹಜ್‌ಹಬ್ಬದ ನೆನಪು…. 

ಸಣ್ಣಗೊಮ್ಮೆ ಹಿಡಿದ ಜಡಿ ಜರ್ರೋಮಳೆ
ಬಾಳೆಯೆಲೆ ಮೇಲೆ ಹಜ್ಜಿಯಬ್ಬದ ಹನಿ
ಬತ್ತಲು ಬಚ್ಚಲ ಮಾಡಿನಿಂದಿಳಿದ ಮೋಡ ಬಿಸಿಲುಕೋಲು

ಹಬೆದುಂಬಿ ಮೈಮಿರುಗಿ ಹಜ್ಜಿಯಬ್ಬದ
ನೀರು ಸೋಕುವಲ್ಲೆಲ್ಲ ಉಮ್ಮಗುನುಗುನಿಸಿ
ಪೆರುನಾಳಿನ ಹಾಡು.

 ಬೆನ್ನೊರಸಿ ಉಡಿದಾರಕ್ಕೆ
ಮುಂಡುಡಿಸಿ, ಕಿವಿ ಎಳೆದು ಬೈತಲೆಯಲ್ಲಿ
ಬೆರಳಿರಿಸಿ ಪಾವಲಿ ಉಡಿತುಂಬಿ,
ಅತ್ತರು ಪೂಸಿ ಕಿವಿಯಲ್ಲಿ ಊದಿ, ದಾರಂದದ
ಮುಂದೆ ತಂಗಿ ‘ಅಲೀಮಾ’ ಚಾಚಿ ಕೈಚಾಚಿ
ಕೈಯೆಲ್ಲ ಮದರಂಗಿ ಕೆಂಪು ಹಕ್ಕಿ, ಕಿವಿಯೆಲ್ಲ ಬೆಳ್ಳಿ
ಎಸಳೆಲ್ಲ ಝಮಕಿ,ಅಂಗಳದ ಹಸಿಮಣ್ಣ ಮೇಲೆ ಧುಮುಕಿ.
ಬಿಳಿ ಮಲ್ಲಿಗೆಯ ಮಾಲೆ ಮುಡಿಯ ಮೇಲೆ.
ಹುಡುಗ ಕಾಡೊಳಗೆ ಅಲ್ಲಾಕರೆದಂತೆ ಪಳ್ಳಿಗೆ
ಬಾಪಾನ ಹಿಂದೆ, ‘ಅಲ್ಲಾಹು ಅಕ್‌ಬರ್’abraham_isaac.jpg

ಕಾಡೊಳಗೆ ಕರೆದಂತೆ, ಹನಿಯೊಳಗೆ ಕರೆದಂತೆ
ಕಾಡಿನೊಳಗಡೆ ಕರೆದಂತೆ ಮಗನ ಅಲ್ಲಾನ ಕಡೆಗೆ
ಅಲ್ಲಿ ಮರಳು ಗಾಡಿನ ‘ಕಹಬಾ’ದ
ಅತ್ತಕಡೆ ಇಬ್ರಾಹಿಂ ನೆಬಿ ಮಗ ಇಸ್‌ಮಾಯೀಲನ
ಕೊರಳ ಅಲ್ಲಾಹನಿಗೆ ಕೋಯ್ದು ಕೊಡುವಂತೆ,
ದಿಕರಿಡುತ್ತವೆ ಕಿವಿಯ ಒಳಗೆ ಕಾಡನಡುವೆ.

ಉಮ್ಮನ ಪಾವಲಿ ಮುಂಡುಡಿಯಲ್ಲಿ ಕಣ್ಣ ತಬ್ಬುತ್ತದೆ.
ಕರಿದ ನೇಂದ್ರ ಕಾಯಿ ನಾಲಗೆಯಪ್ಪುತ್ತದೆ
ಸುಯ್ಯೋಹನಿಯಲ್ಲಿ ಕಿವಿದುಂಬುತ್ತದೆ, ಮರದ ಹನಿಕಣ್ಣು
ತಂಗಿಯ ಕಿವಿಯ ಬೆಳ್ಳಿ ತೊಟ್ಟಿಕ್ಕುತ್ತದೆ. ಬಾಪಾನ ಹಿಂದೆ
ಅಲ್ಲಾನ ಕಡೆಗೆ.

ಇರುವುದೊಂದೇ ಬಾಪಾ, ಹಿಂಬಾಲಿಸಲಿಕ್ಕಿರುವುದೊಂದೇ ಬಾಪಾ
ಈ ಇಷ್ಟು ಮಳೆಯ ಕಾಡಿನಲ್ಲಿ ಹನಿವ ಹನಿಯೆಲ್ಲ
ಬಾಪಾ ಕರೆದಂತೆ, ನೆಲವೆಲ್ಲ ಪಸೆಯಿಡಿದು ಜಾರುಜಾರಿಗೆ
ದೂರ ಸರಿದಂತೆ ಬಾಪಾ ಕಾಲುರೋಡಿನೊಳಗೆ
ಅಲ್ಲಾನ ಕಡೆಗೆ.

ಹರಿದ ತೊರೆ ಅಡಿಕೆ ಪಾಲದ ಮೇಲೆ ಬಾಪಾ
ನಡೆದಂತೆ ನಡುಗುತ್ತಾ ಹುಡುಗ,
ನಡುಗುತ್ತ ಅಡಿಗಡಿಗೆ ಅಲ್ಲಾನ ಕರೆಯುತ್ತ ಹುಡುಗ.

ಕಣ್ಣ ಅಗಲಕ್ಕೆಲ್ಲ ಅಲ್ಲಾ, ನದಿ ಹರಿದಂತೆ ಕೆಳಗೆ
ಅಲ್ಲಾ, ಆಕಾಶವೆಲ್ಲ ಕರಿದುಂಬಿ ಹರಿದಂತೆ
ಅಲ್ಲಾ, ಮರದಮರದ ತೊಗಟಿ ಕರಿಗಟ್ಟಿ ಬೇರು
ಪೊದೆಯೆಲ್ಲ ನೀರು ಮುಂಡು ತೊಯ್ಸಿಸಿಕೊಂಡು
ನಡೆವ ಹುಡುಗನೆದೆಯಲ್ಲೆಲ್ಲ ಅಲ್ಲಾನ ಕಡೆಗೆ ನಡೆವ ಬಾಪಾ.

ಹರಿವ ತೊರೆದಾಟಿ ಮುಳಿ ಹುಲ್ಲ ನೆಲದಲ್ಲಿ
ಕಾಲೊಸರುವಲ್ಲೆಲ್ಲಾ ಅಕ್ಕಿ ಹಿಟ್ಟಿನ ಮೇಲೆ
ನಾದಿದಂತೆ ಅಲ್ಲಾನ ಹೆಜ್ಜೆ.

 ಪಳ್ಳಿಯ ಪಡಿಯೇರಿದ
ಮೇಲೆ ಬಾಪಾ ಅಲ್ಲಾನ ಮುಂದೆ ‘ಅಲ್ಲಾಹು ಅಕ್‌ಬರ್’
ಹುಡುಗ ನುಡಿ ತುಂಬಿ ಹರಿವ ಪಾವಲಿಯಲ್ಲೆಲ್ಲ
ಉಮ್ಮ ಅಳುವಂತೆ ಪಳಿಯಿಂದೆಲ್ಲಿಂದಲೋ ಅಲ್ಲಾ
ಕರೆದಂತೆ ‘ಕಹಬಾ’ದ ಕಡೆಗೆ, ಕಾಡಿನಲ್ಲೆಲ್ಲೋ
ಬಾಪಾ ಪುಟ್ಟ ಹುಡುಗನ ಬಿಟ್ಟು ನಡೆದಂತೆ ಎಲ್ಲೋ
‘ಅಲ್ಲಾಹು ಅಕ್‌ಬರ್’.

Saturday December 15, 2007

ಚೆರ್ರಿ ಹೂವು ಮತ್ತು ಚೈನಾದ ಕತೆಗಾರ್ತಿ

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 11:04 pm

 sc00077b1e-1.jpgಕತೆಯೊಂದನ್ನು ಬರೆಯಲು ಹೋರಾಡುತ್ತಾ ಇದೀಗ ಅದರಿಂದ ತಪ್ಪಿಸಿಕೊಳ್ಳಲು ಈ ಕಾಗದವನ್ನು ಬರೆಯುತ್ತಿರುವೆ. ಕತೆಯನ್ನು ಮನಸ್ಸಿನಲ್ಲಿಯೇ ಅಂದುಕೊಳ್ಳುತ್ತಾ ಆನಂದಿಸುತ್ತಾ ಮನಸ್ಸಿನಲ್ಲಿಯೇ ಮುಗಿಸಿ ಕೂರುವುದು ಎಂತಹ ಸುಲಭದ ವಿಷಯ. ಆದರೆ ಅದನ್ನೇ ಕಾಗದದಲ್ಲಿ ತರುವುದು,ಪಾತ್ರಗಳನ್ನು ಜೋಡಿಸುವುದು, ಅವುಗಳ ಬಾಯಿಂದ ಮಾತುಗಳನ್ನು ಹೇಳಿಸುವುದು ಎಂತಹ ರೇಜಿಗೆಯ ಕೆಲಸ. ಈ ಮಹಾ ಮಹಾ ಕತೆಗಾರರೆಲ್ಲಾ ಎಂತಹ ಹಠಮಾರಿ ಮಹಾತ್ವಾಕಾಂಕ್ಷೀ ಮನುಷ್ಯರು ಅಂತ ಯೋಚಿಸಿ ಆಶ್ಚರ್ಯವಾಗುತ್ತಿದೆ.

ನಿನ್ನೆ ಮೊನ್ನೆಯೆಲ್ಲಾ ಇಲ್ಲಿ  ಷಿಲ್ಲಾಂಗಿನಲ್ಲಿ ವಿಪರೀತ ಮಳೆ ಸುರಿಯುತ್ತಿತ್ತು. ಅದಕ್ಕೂ ಮೊದಲು ಈ ಊರ ತುಂಬಾ ಕಾಡು ಚೆರ್ರಿ ಮರಗಳು ನಸುಗೆಂಪು ಹೂ ತುಂಬಿಕೊಂಡು ನಿಂತಿದ್ದವು. ಈ ಊರಿನ ತುಂಬಾ ಬರೇ ಈ ಮರಗಳು ಅನ್ನುವ ಹಾಗೆ. ಅಕಾಲ ಮಳೆ ಸುರಿಯಲು ತೊಡಗಿ ಈ ಮರಗಳೆಲ್ಲಾ ಎರಡು ದಿನ ಲಜ್ಜೆಯಿಂದ ಭಾರವಾಗಿ ನೋವು ತುಂಬಿಕೊಂಡು ನಿಂತಿದ್ದವು. ಇಂದು ಬೆಳಿಗ್ಗೆ ಮಳೆ ನಿಂತು ನೋಡಿದರೆ ಎಲ್ಲಾ ಮರಗಳು ನಸುನಗುತ್ತಿದ್ದವು. ಎಲ್ಲೋ ಅಡಗಿದ್ದ ಬಣ್ಣಬಣ್ಣದ ಪಾತರಗಿತ್ತಿಗಳು ಮತ್ತೆ ಉಲ್ಲಾಸದಿಂದ ಹಾರಲು ಶುರುಮಾಡಿದ್ದವು. ಇನ್ನು ಕೆಲವು ದಿನಗಳಲಿ ಪ್ಲಂ ಮರಗಳು ಆಮೇಲೆ ಪೀಚ್  ಮರಗಳು ಹೀಗೆ ಹೂ ಬಿಡಲು ತೊಡಗುತ್ತದೆ. ಇನ್ನೆಷ್ಟು ಚಿಟ್ಟೆಗಳು ಎಂದು ಆಶೆಯಿಂದ ಕಾಯುತ್ತಿದ್ದೇನೆ.

ಆದರೆ ವರ್ಷಗಳಿಂದ ನಾನು ಒಂದು ಕತೆಯನ್ನೂ ಬರೆದಿಲ್ಲ ಎಂದು ಯೋಚಿಸಿಕೊಂಡು ಮುದುಡಿಹೋಗಿದ್ದೇನೆ. 

(more…)

Sunday December 9, 2007

ರೂಮಿ ಕವಿಯ ಹನ್ನೆರಡು ಪುಟ್ಟ ಕವಿತೆಗಳು

 

 

rumi6.jpg

-೧-

ನೀರೊಳಗೆ ತಿರುಗುತ್ತಿದೆ ನೀರ ಗಾಲಿ,

ತಾರೆ ತಿರುಗುತ್ತಿದೆ ಚಂದ್ರನೊಡನೆ.

ಚಕಿತ ನಾವು ಈ ಇರುಳಲ್ಲಿ,ಅದು ಹೇಗೆ

 ಇಷ್ಟೊಂದು ಬೆಳಕು ಇಲ್ಲಿ !

(more…)

Wednesday November 28, 2007

ಹೋಗದಿರಿ ಹೀಗೆ ಮೆಲ್ಲಗೆ ಆ ಸುಖದ ಇರುಳಿನೊಳಗೆ

Filed under: ಅನುವಾದಗಳು — Rasheed @ 7:31 pm

ನನ್ನ ತೀರಾ ಹತ್ತಿರದ ಗೆಳೆಯನ ತಂದೆ ಇಂದು ಮುಂಜಾನೆ ತೀರಿ ಹೋದರು.ಒಂದು ವಾರದ ಹಿಂದೆ ನನ್ನ ಮಾವ ತೀರಿ ಹೋದರು.ಇಬ್ಬರಿಗೂ ವಯಸ್ಸಾಗಿತ್ತು. ಮತ್ತು ಇಬ್ಬರೂ ಅವರವರ ರೀತಿಯಲ್ಲಿ ಬೆರಗು ಹುಟ್ಟಿಸುವಷ್ಟು ಸಮರ್ಥರಾಗಿದ್ದರುಎರಡು ಮೂರು ದಿನಗಳ ಹಿಂದೆ ನನ್ನ ಗೆಳೆಯ Dylan Thomas ಬರೆದ ಈ ಕವಿತೆಯನ್ನು ನೆನಪಿಸಿಕೊಂಡು ಮಾತನಾಡುತ್ತಿದ್ದ. ಅದನ್ನು ಈಗ ಕೂತು ಕನ್ನಡಕ್ಕೆ ಅನುವಾದಿಸಿರುವೆ.  ಹೋಗದಿರಿ ಹೀಗೆ ಮೆಲ್ಲಗೆ ಆ ಸುಖದ ಇರುಳಿನೊಳಗೆ

(more…)

Monday November 26, 2007

ಕಡಲು, ಕನ್ನಡ ಮತ್ತು ಮುಳುಗುತ್ತಿರುವ ಹಡಗು

Filed under: ಅಲೆಮಾರಿಯ ದಿನಚರಿ — Rasheed @ 7:29 pm

ಹಲವು ವರುಷಗಳ ಮೊದಲು ಒಂದು ಸಂಕ್ರಾಂತಿಯ ಮಾರನೇ ದಿನ ವಿಮರ್ಶಕ ಪ್ರೊಫೆಸರ್ ಕಿ.ರಂ.ನಾಗರಾಜರನ್ನ ಬೈಕಿನಲ್ಲಿ ಕೂರಿಸಿಕೋಂಡು ಮಂಗಳೂರಿನ ಬೆನ್ನ ಹಿಂದೆ ಇರುವ ಒಂದು ಅಪರೂಪದ ಜಾಗಕ್ಕೆ ಕರೆದುಕೊಂಡು ಹೋಗಿದ್ದೆ. ಈ ಜಾಗ ತುಂಬಾ ಅಪರೂಪ.ಯಾಕೆಂದರೆ ಈ ಜಾಗ ಕೆಲವೇ ಕೆಲವರಿಗೆ ಗೊತ್ತಿದೆ ಮತ್ತು ಇಲ್ಲಿ ಎರಡು ದೊಡ್ಡ ನದಿಗಳು ಕಡಲನ್ನು ಸೇರುತ್ತದೆ.ಇಲ್ಲಿ ನಿಂತರೆ ಯಾವುದು ಯಾವ ನದಿ ಮತ್ತು ಯಾವುದು ಕಡಲು ಎಂದು ಗೊತ್ತಾಗುವುದಿಲ್ಲ. ಮುಳುಗುತ್ತಿರುವ ಸೂರ್ಯ ಇದೇ ಹೊತ್ತಲ್ಲಿ ಎಲ್ಲಿ ಉದಯಿಸುತ್ತಿರುವ ಎಂದು ಗೊತ್ತಾಗುತ್ತಿದೆ ಎಂದು ಅನಿಸುತ್ತದೆ. ಯಾವುದೋ ಒಂದು ದೇಶ, ಯಾವುದೋ ಒಂದು ಕಾಲ ಕಣ್ಣ ಮುಂದೆ ಕಾಣುತ್ತದೆ. ಕಣ್ಣು ಮುಚ್ಚಿದರೆ ಮುಚ್ಚಿದ ಕಣ್ಣೊಳಗೆ ಹಸಿರು ತೇಪೆಗಳು ಸರಿದಾಡುತ್ತವೆ. ಮೀನುಗಾರರ ದೋಣಿಗಳು ಮತ್ತು ಕಡಲ ಹಕ್ಕಿಗಳು ಅಲೆದಾಡುತ್ತಿರುವ ಆತ್ಮಗಳಂತೆ ಓಡಾಡುತ್ತಿರುತ್ತವೆ.kiram.jpg

ಇಲ್ಲಿ ಕೂತುಕೊಂಡು ಕನ್ನಡದ ಖ್ಯಾತ ವಿಮರ್ಶಕರಾದ ಪ್ರೊಫೆಸರ್ ಕಿ.ರಂ.ನಾಗರಾಜ್  ಪುಟ್ಟ ಬಾಲಕನಂತೆ ಮಳೆಗಾಲದಲ್ಲಿ ಈ ಕಡಲು ಹೇಗಿರುತ್ತದೆ ಎಂದು ಕೇಳುತ್ತಿದ್ದರು. ನಾನು ಮಹಾ ಮಳೆಗಾಲದಲ್ಲಿ ಕಡಲನ್ನು ನೋಡಿದವನಂತೆ ಭೂಮಿ ಆಕಾಶ ಕಡಲು ಎಲ್ಲಾ ಒಂದೇ ಆಗಿಬಿಟ್ಟಿರುತ್ತದೆ. ಎಲ್ಲವೂ ಮಂಜು ಮುಸುಕಿದಂತೆ… ಎಂದು ಹೇಳುತ್ತಿದ್ದೆ.

ಆ ಮೇಲೆ ಈ ಜಾಗಕ್ಕೆ ಬೆಳದಿಂಗಳ ರಾತ್ರಿಯಲ್ಲಿ ಬರಬೇಕು  ಎಂದು ವಿಷಯ ಬದಲಿಸಿದೆ.

ತಿರುಗಿ ಬರುವಾಗ ಅವರಿಗೆ ಒಂದು ಮುಳುಗಿದ ಹಡಗನ್ನು ತೋರಿಸಿದೆ ಮತ್ತು ಮಹಮ್ಮದ್ ಆಲಿ ಎಂಬ ಸಾಹಸಿ ಈಜುಗಾರನ ಕತೆ ಹೇಳಿದೆ. ಈ ಮುಳುಗಿದ ಹಡಗು ಅಲ್ಲಿ ಮುಳುಗಿ ಆಗಲೇ ಆರೇಳು ವರ್ಷಗಳಾಗಿತ್ತು. ಇಲ್ಲಿ ಮುಳುಗುವ ಮೊದಲು ಇದು ಹಾಂಕಾಗಿನ ಒಬ್ಬ ಚೀನೀ ವರ್ತಕನಿಗೆ ಸೇರಿತ್ತು. ಅದು ಎಲ್ಲೋ ಸಾಗರದ ನಡುವಲ್ಲಿ ಇನ್ನೊಂದು ಹಡಗಿಗೆ ಡಿಕ್ಕಿ ಹೊಡೆದು ಹಾಳಾಗಿ ಅದನ್ನು ಒಡೆದು ತೂಕಕ್ಕೆ ಕಬ್ಬಿಣವನ್ನಾಗಿ ಮಾರಲು ಈ ಕಡಲ ತಡಿಗೆ ತಂದಿದ್ದರು. ದಡದ ಹತ್ತಿರ ಬಂದಂತೆ ಅದು ಕಡಲ ಕೊರೆತಕ್ಕೆ ಸಿಲುಕಿ ಮರಳಿನೊಳಗೆ ಹೂತು ಹೋಗಲು ತೊಡಗಿ ನಾನು ಅದನ್ನು ಕಿ.ರಂ ಗೆ ತೋರಿಸುವಾಗ ಅದರ ಚಾವಣಿ ಮಾತ್ರ ಕಾಣುತ್ತಿತ್ತು. (more…)

Sunday November 18, 2007

ಓ ಎಳೆಯ ಜೀವಗಳೆ .. ..

Filed under: ಮಾತಿಗೂ ಆಚೆ — Rasheed @ 10:42 pm

ಹಲವು ವರ್ಷಗಳ ಹಿಂದೆ ಮಂಗಳೂರಿನ ಬಳಿ ಐದು ಮಂದಿ ಬಾಲಕಿಯರು ಕೊಳದಲ್ಲಿದೋಣಿ ಮಗುಚಿ ನೀರಲ್ಲಿ ಮುಳುಗಿ ತೀರಿಹೋದರು. ನಾನು ಅವರಲ್ಲಿ ಇಬ್ಬರ ಮೃತದೇಹವನ್ನು ಆಸ್ಪತ್ರೆಯ ಶವ ಕೊಠಡಿಯಲ್ಲಿ ನೋಡಿ ಬಂದಿದ್ದೆ.thegoldendeath_sm.jpg ಮೂಲೆಯಲ್ಲಿ ಇನ್ನೊಬ್ಬ ಗಂಡಸಿನ ಮೃತ ದೇಹವೂ ಇತ್ತು. ಆತ ಮಧ್ಯಾಹ್ನ ಹನ್ನೆರಡು ಗಂಟೆಗೆ ಮನೆಯಲ್ಲಿ ಬಾಗಿಲು ಮುಂದೆ ಮಾಡಿಕೊಂಡು ಉಣ್ಣುತ್ತಾ ಇದ್ದನಂತೆ. ಮುಳುಗಿ ಹೋಗುತ್ತಿರುವ ಬಾಲಕಿಯರು ಕೂಗಿಕೊಳ್ಳುವುದು ಕೇಳಿಸಿಕೊಂಡವನಂತೆ ಉಣ್ಣುತ್ತಿದ್ದಲ್ಲಿಂದ ಹಾರಿ ಎದ್ದು ಕೆರೆಯ ಕಡೆಗೆ ಓಡಿ ನೀರಿಗೆ ಹಾರಿ ತೀರಿಕೊಂಡುಬಿಟ್ಟ. ಅವನಿಗೆ ತುಂಬಾ ಚೆನ್ನಾಗಿ ಈಜಲು ಬರುತ್ತಿತ್ತಂತೆ. ಸಣ್ಣದಿರುವಾಗ ಸೀಬೆಮರದ ಗೆಲ್ಲಿನಿಂದ ಕೆಳಗಿನ ಬಾವಿಗೆ ಹಾರಿ ಮುಳುಗಿ ಮುಷ್ಟಿಯಲ್ಲಿ ಬಾವಿಯ ತಳದ ಮರಳು ಹಿಡಿದುಕೊಂಡು ಮೇಲೆ ಬರುತ್ತಿದ್ದನಂತೆ.

 ಆತನ ಬಾಲ್ಯ ಕಾಲದ ಗೆಳೆಯ ಶವಾಗಾರದೊಳಗೆ ಗೆಳೆಯನ ಮೃತದೇಹದ ಮುಂದೆ ಕಥೆ ಹೇಳುತ್ತಾ ಅಳುತ್ತಿದ್ದ. ತೀರಿ ಹೋದವನ ಹೆಂಡತಿ ಅಳಲು ಬಾರದೆ ಪೆಚ್ಚುಪೆಚ್ಚಾಗಿ ಏನೋ ಹೇಳುತ್ತಿದ್ದಳು.

`ಅವರಿಗೆ ಈಜು ಬರುತ್ತಿತ್ತು ಎಂದು ನಾನು ಹೇಳಲು ಬರುವುದಿಲ್ಲ.. .. ಆದರೆ ಅವರು ಕಡಲಿಗೆ ಹೋಗುತ್ತಿದ್ದರು.. .. ಆದರೆ ನಾನು ಅವರ ಜೊತೆಗೆ ಕಡಲಿಗೆ ಹೋಗಿರಲಿಲ್ಲ.. ..’ ಅನ್ನುತ್ತಿದ್ದಳು. ಕೊನೆಗೆ ಏನೋ ನೆನಪಾದವಳಂತೆ ಅಳಲು ತೊಡಗಿದಳು. (more…)

Monday November 5, 2007

‘ಪಾತು’ – ಒಂದು ಸಣ್ಣ ಕತೆ

Filed under: ಕತೆ-ಗಿತೆ — Rasheed @ 10:24 pm

paatu-10.jpg

[ಚಿತ್ರ:ಚರಿತಾ]

ಯಾರು ಯಾರೆಂದು ಗೊತ್ತಾಗದಂತೆ ಸುರಿಯುತ್ತಿರುವ ಬೆಳ್ಳನೆಯ ಮಳೆಯಲ್ಲಿ ಪಾತು ತಲೆಯ ಮೇಲೊಂದು ಗೊರಬೆ ಹಾಕಿಕೊಂಡು ನಡೆದು ಹೋಗುತ್ತಿದ್ದಳು. ಗೊರಬೆಯ ಒಳಗೆ ಅವಳ ಮುಖ ಬೆವರಿಕೊಂಡು, ಅವಳ ಕೆನ್ನೆ, ಮೂಗು, ತುಟಿಯ ಮೇಲೆಲ್ಲಾ ಮಳೆಯ ಹನಿಗಳು ಸಿಡಿದು ಅವಳು ಮಳೆಗೆ ಮುಖ ಓರೆ ಮಾಡಿಕೊಂಡು ಕೆಸರಲ್ಲಿ ಹೆಜ್ಜೆ ಹಾಕುತ್ತಿದ್ದಳು. ಅವಳ ನಡುವಲ್ಲಿ ಸೀರೆಯ ಮೇಲೆ ಬಿಗಿದು ಕಟ್ಟಿರುವ ಗೋಣಿಯ ಚೀಲ, ಅವಳ ಕೈಯ್ಯಲ್ಲಿನ ಕಚ್ಚರೆ ತೆಗೆಯುವ ದಬ್ಬೆ ಕತ್ತಿ, ಅವಳ ಕುಳ್ಳನೆ ಕಾಲಿನ ದಪ್ಪಮೀನಖಂಡಗಳು, ಅತ್ತು ಮುಗಿಸಿದಂತೆ ಕೆಂಪಗೆ ಇರುವ ಅವಳ ಮೂಗು, ಕಾದಾಡಿ ಬಂದಂತೆ ಇರುವ ಅವಳ ಕಣ್ಣುಗಳು – ಪಾತು ಇಷ್ಟು ವರ್ಷವಾದರೂ ಅದೇ ಹಳೆಯ ಮದುಮಗಳಂತೆ ಸೊಂಟ     ಬಳುಕಿಸಿಕೊಂಡು, ಗೋಣಿ ಸುತ್ತಿದ್ದ ಅವಳ ಕುಂಡೆ ಅಲ್ಲಾಡುತ್ತಾ ಅವಳು ಕೊಂಚ ಬೆನ್ನು ಬಾಗಿಸಿಕೊಂಡು ಏನೂ ಆಗಿಯೇ ಇಲ್ಲವೆಂಬಂತೆ ಬರೆಇಳಿದು ತಿರುವಲ್ಲಿ ಮರೆಯಾಗಿ ಹೋಗುತ್ತಿದ್ದಳು.ಹಾಗೆಯೇ ಹನಿಯುತ್ತಿರುವ ಮಳೆ, ಹಾಗೇ ಇರುವ ಈ ಮಣ್ಣಿನ ಬರೆ. ಹಾಗೇ ತುಂಬಿಕೊಂಡಿರುವ ಭತ್ತದ ಗದ್ದೆ. ಅದೇ ಇಳಿದುಹೋಗುವ ರಸ್ತೆಯ ತಿರುವು. ರಸ್ತೆಯ ಆಚೆ ಕತ್ತಲು ತುಂಬಿಕೊಂಡಿರುವ ಕಾಫಿಯ ತೋಟ. ತೋಟದ ಆಚೆ ತೀರಿಹೊದವರು ಮಲಗಿರುವ ಮೈದಾನಿಯ ಕಾಡು. ಕಾಡೊಳಗೆ ಕಾಣಿಸುವ ಗೋರಿಯ ಕಲ್ಲುಗಳು. ಕಾಡಿನ ನಡುವೆ ಬಿದ್ದುಹೋಗಿರುವಂತೆ ಕಾಣಿಸುವ ಅರಬಿ ಕಲಿಸುವ ಮದರಸದ ಹಂಚಿನ ಮಾಡು. ಮದರಸದ ಮೇಲೆ ನಿಂತುಕೊಂಡಿರುವ ದೂಪದ ಮರ…

ನಗು ಬಂತು. ಸಣ್ಣದಿರುವಾಗ ಪಾತುವಿನ ಕೊಡೆಯೊಳಗೆ ಸೇರಿಕೊಂಡು ಅರಬಿ ಮದರಸಕ್ಕೆ ಕಾಡು ದಾರಿಯಲ್ಲಿ ನಡೆದು ಹೋಗುವಾಗ ತೋರುಬೆರಳಿಂದ ಗೋರಿಯ ಕಲ್ಲುಗಳನ್ನು ತೋರಿಸಿದಾಗ ಪಾತು ನನ್ನ ತೋರು ಬೆರಳನ್ನು ಕಚ್ಚಿ ರಕ್ತ ಚೀಪಿದ್ದಳು. ತೀರಿಹೋದ ತನ್ನ ತಂದೆ ತಾಯಿ ಮಣ್ಣಲ್ಲಿ ಮಣ್ಣಾಗಿ ಮಲಗಿರುವ ಮೈದಾನಿ ಕಾಡನ್ನು ತೋರುಬೆರಳಿನಿಂದ ತೋರಿಸಬಾರದು ಎಂದು ಬೆನ್ನಿಗೆ ಗುದ್ದಿದ್ದಳುಈಗ ನೋಡಿದರೆ ಏನೂ ಅಲ್ಲದವಳ ಹಾಗೆ ಕೈಯಲ್ಲಿ ಕಾಡು ಕಡಿಯುವ ದಬ್ಬೆ ಕತ್ತಿ ಹಿಡಿದುಕೊಂಡು ಮೈದಾನಿ ಕಾಡಿನ ಕಡೆ ನಡೆದುಹೋಗುತ್ತಿದ್ದಳು.

 

ಪಾತು ಕಾಫಿ ತೋಟದ ಕಾವಲುಗಾರ ಕೊಂಬಿನ ಮೀಸೆ ಪೋಕರ್‌ಕಾಕನ ಮೊದಲನೇ ಹೆಂಡತಿಯ ಮಗಳು. ಪೋಕರ್‌ಕಾಕ ಬಂದರು ಎಂದರೆ ನಾವು ಹುಡುಗರು ಕಾಫಿಯ ತೋಟದ ಗಿಡಗಳ ಕೆಳಗೆ ಚೆಲ್ಲಾಪಿಲ್ಲಿಯಾಗುತ್ತಿದ್ದೆವು. ಪೋಕರ್‌ಕಾಕ ಮುಖದ ತುಂಬ ಆನೆಯ ಕೊಂಬಿನಂತೆ ಮೀಸೆ ಬೆಳೆಸಿಕೊಂಡು, ಕಣ್ಣುಗಳನ್ನು ಹಾರಿಸಿಕೊಂಡು, ತೋಟದ ಗಿಳಿಗಳನ್ನೂಇಣಚಿಗಳನ್ನೂ ಜೋರು ಮಾಡುತ್ತಾ, ಕಾಫಿ ತೋಟದ ಕಾಲುದಾರಿಗಳಲ್ಲಿ ಗಂಬೂಟಿನ ಹೆಜ್ಜೆ ಸದ್ದು ಮಾಡಿಕೊಂಡು ಕಿತ್ತಳೆ ಕದಿಯಲು ಬರುವ ಹುಡುಗರನ್ನು ಓಡಿಸುತ್ತಾ ನಡೆದಾಡುತ್ತಿದ್ದರು. ತೋಟದೊಳಗೆ ಮಂಗಗಳ ವಾಸನೆ ಬಂದರೆ ಸಾಕು ಮಂಗಗಳನ್ನು ಬೈಯುತ್ತಾ, ಮನುಷ್ಯರ ವಾಸನೆ ಬಂದರೆ ಹುಡುಗರನ್ನು ಬೈಯುತ್ತಾ ಪೋಕರ್‌ಕಾಕ ನಡೆದಾಡುತ್ತಿದ್ದರೆ, ಪಾತು ಹುಡುಗರ ಜೊತೆ ಸೇರಿಕೊಂಡು ತಂದೆ ಪೋಕರ್‌ಕಾಕನ ಗಂಬೂಟಿನ ಗುರುತುಗಳನ್ನು ನೆಲದಲ್ಲಿ ಪತ್ತೆ ಹಿಡಿಯುತ್ತಾ ಗಾಳಿಯಲ್ಲಿ ತಂದೆಯ ಮೈಯ ವಾಸನೆಯನ್ನು ಕಂಡು ಹಿಡಿಯುತ್ತಾ ತಂದೆ ಆ ಕಡೆ ನಡೆಯಲು ಈ ಕಡೆ ನುಸುಳುತ್ತಾ, ತಂದೆ ಈ ಕಡೆ ಬರಲು ಆ ಕಡೆ ಅಡಗುತ್ತಾ ಕಾಡುಕೋಳಿಯಂತೆ ಕಾಫಿ ತೋಟದೊಳಗೆ ನಡೆದಾಡುತ್ತಿದ್ದಳು.

(more…)

Monday October 29, 2007

ಶನ್ಯಾಶಿ ಸಿಕ್ಕಿದಳು

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 10:32 pm

 

ಕೆಲವು ವರುಷಗಳ ಹಿಂದೆ world cup football ನಡೆಯುತ್ತಿದ್ದಾಗ ಒಬ್ಬನಿಗೇ ಬೇಸರವಾಗಿ ಎಂದಿನ ಹಾಗೆ ಮಂಗಳೂರಿನ ಬೀದಿಗಳಲ್ಲಿ ತಲೆ ತಗ್ಗಿಸಿಕೊಂಡು ನಡೆಯುತ್ತಿದ್ದೆ. ಹಾಗೇ ನೋಡಿದರೆ ನೆಹರೂ ಮೈದಾನದಲ್ಲಿ football ಆಡುತ್ತಿದ್ದರು. ಜನ ಸೇರಿದ್ದರುshanyasi2.jpg. ಮೈದಾನದ ಕೊನೆಯಲ್ಲಿ ರಾಜಸ್ತಾನದ ದೊಂಬರಾಟದ ಕುಟುಂಬವೊಂದು ಡೇರೆ ಬಿಚ್ಚಿ ನೆಲದಲ್ಲಿ ಹರವಿಕೊಂಡು  ಆಕಾಶವನ್ನು  ನೋಡುತ್ತಾ ಕೂತಿತ್ತು. ಹೆಂಗಸೊಬ್ಬಳು ಬಾಯಿ ಬಡಿಯುತ್ತಾ  ಅಳುತ್ತಿದ್ದಳು .ಏಕೆಂದರೆ ಆಕೆಯ ಆರು ವರ್ಷದ ಮಗಳು ಕಾಣೆಯಾಗಿದ್ದಳು. ಕಾಣೆಯಾದ ಆ ಬಾಲಕಿಯ ಹೆಸರು ಶನ್ಯಾಶಿ. ಇದ್ದಕ್ಕಿದ್ದಂತೆಯೇ ಆಕೆ ಜನಜಂಗುಳಿಯಲ್ಲಿ ಕಾಣೆಯಾಗಿದ್ದಳು. ಆಕೆಯಿಲ್ಲದೆಯೇ ತಿರುಗಿ ಹೋಗುವುದು ಹೇಗೆಂದು ಆ ದೊಂಬರಾಟದ ಕುಟುಂಬಗವೇ ಅಲವತ್ತುಕೊಂಡು ಕೂತಿತ್ತು.

ಮಂಗಳೂರಿನ ನನ್ನ ಗೆಳೆಯರು, ನಾನು ಮತ್ತು ನನ್ನ ಹೆಂಡತಿ ಸುಮಾರು ಇಪ್ಪತ್ತು ದಿನಗಳ ಕಾಲ ಕಾಣೆಯಾದ ಈ ಹುಡುಗಿಯ ಜಾಡನ್ನು ನೋಡುತ್ತಾ ಒಂದು ಪ್ರಪಂಚವನ್ನೇ ಕಂಡೆವು. ಮಗುವನ್ನು ಬೀದಿಸೂಳೆಯರು ಕದ್ದು ಮಾರಿದ್ದಾರೆಂದು ಅವರ ಹಿಂದೆ, ಭಿಕ್ಷುಕರು ಸಾಕುತ್ತಿದ್ದಾರೆಂದು ಅವರ ಹಿಂದೆ, ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರುವ ಮಲಯಾಳೀ ಕುಂಟನೊಬ್ಬನ ಹಿಂದೆ,ಪೊಲೀಸರ ಹಿಂದೆ, ಪತ್ರಕರ್ತರ ಹಿಂದೆ ಹೀಗೇ ತಿರುಗಾಡಿದೆವು.shanyasi.jpg

ಇಪ್ಪತ್ತು ದಿನಗಳು ಕಳೆದು ಬೀದಿ ಗುಡಿಸುವ ದಲಿತ ಹೆಂಗಸೊಬ್ಬಳ ಮನೆಯಲ್ಲಿ ಶನ್ಯಾಶಿ ದೊರಕಿದಳು. ಮಗು ದೊರಕಿದ ರಾತ್ರಿ ಬೆಳದಿಂಗಳಲ್ಲಿ ಆ ದೊಂಬರಾಟದ ತಂಡ ನಮ್ಮ ಸುತ್ತು ಸೇರಿಕೊಂಡು ಹಾಡಿಕೊಂಡು ಕುಣಿದುಕೊಂಡು ನಮಗೆಲ್ಲ ನಾವು ಇರುವುದು ಯಾವ ಕಾಲವೋ ಎಂದು ಅನಿಸಲಿಕ್ಕೆ ಹತ್ತಿತ್ತು.

ಈ ಹುಡುಕಾಟದ ಸಮಯದಲ್ಲಿ ನಮಗೆ ಅಬ್ದುಲ್ ರಜಾಕ್ ಎಂಬ ಭಿಕ್ಷುಕನೂ, ಮಾದೇವಿ ಎಂಬ ಆತನ ಹೆಂಡತಿ ಭಿಕ್ಷುಕಿಯೂ ಪರಿಚಯವಾಗಿದ್ದರು. ಅಬ್ದುಲ್ ರಜಾಕ್ ಎಂಬುವನು ಹರಪನಹಳ್ಳಿಯಲ್ಲಿ ಬಿರಿಯಾನಿ ಹೋಟೆಲಲ್ಲಿ ಕೆಲಸಕ್ಕಿದ್ದನಂತೆ. ಮಾದೇವಿ ಬೆಸ್ತರ ಹೆಂಗಸು. ಇಬ್ಬರೂ ನಡು ವಯಸ್ಸಲ್ಲಿ ಜೊತೆಗೆ ಜೀವಿಸಲು ತೊಡಗಿದರು. ಅಷ್ಟರಲ್ಲಿ ಈ ರಜಾಕ್‌ಗೆ ಒಲೆಯ ಬೆಂಕಿ ಅಲರ್ಜಿಯಾಗಿ ಬಿರಿಯಾನಿ ಕೆಲಸ ಮಾಡಲಾಗದೆ ಅವರಿಬ್ಬರು ಊರೂರು ಭಿಕ್ಷೆ ಬೇಡುತ್ತಾ ತಿರುಗುತ್ತಿದ್ದರು. ಮಂಗಳೂರಿಗೆ ಬಂದವರು ಮಳೆಯಲ್ಲಿ ಸಿಕ್ಕಿಹಾಕಿಕೊಂಡು, ನಂತರ ದೊಂಬರಾಟದವರ ಹುಡುಗಿಯನ್ನು ಹುಡುಕುವ ಕೆಲಸದಲ್ಲಿ ನಮ್ಮ ಜೊತೆ ಸೇರಿಕೊಂಡು ನಮಗೂ ಗೆಳೆಯರಾಗಿಬಿಟ್ಟಿದ್ದರು.

ಆ ಮಗು ಸಿಕ್ಕಿದ ಮೇಲೆ ಅವರೂ ಕಾಣೆಯಾಗಿಬಿಟ್ಟರು. ನಾನೀಗ ಮಂಗಳೂರಲ್ಲಿ ಒಂದೊಂದು ಸಲ ಈ ಅಬ್ದುಲ್ ರಜಾಕ್ ಎಂಬ ಭಿಕ್ಷುಕನನ್ನೂ ಅವನ ಹೆಂಡತಿ ಮಾದೇವಿಯನ್ನೂ ಹುಡುಕುತ್ತಿರುತ್ತೇನೆ.

ಆ ದೊಂಬರಾಟದ ಕುಟುಂಬದ ಹಿರಿಯ ರಾಮೇಶ್ವರ್ ಎಂಬಾತ ಕಳೆದ ವಾರ ರಾಜಸ್ತಾನದ ಆಲ್ವಾರ್‌ನಿಂದ ಫೋನಲ್ಲಿ ಮಾತನಾಡಿದ. ಕಳೆದು ಹೋದ ಬಾಲಕಿ ಸಿಕ್ಕಿದ ಕತೆ ಅವನ ಊರಲ್ಲೆಲ್ಲಾ ದೊಡ್ಡ ಸಂಗತಿಯಾಗಿದೆಯೆಂದೂ ನಾವೆಲ್ಲ ಅವನ ಊರಿಗೆ ಹೋಗಬೇಕೆಂದೂ ಹೋದರೆ ಆತ ಕಿಶನ್‌ಗಡ್ ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿರುತ್ತಾನೆಂದೂ ಹೇಳುತ್ತಿದ್ದ.

ನಾನು ಸುಮ್ಮನೇ ಕಾಲದಲ್ಲಿ ಕಳೆದುಹೋಗಿದ್ದೆ.

Wednesday October 24, 2007

ನೂರಾ ಐದು ವರ್ಷಗಳನ್ನು ಕಂಡು ತೀರಿಹೋದರು ರಾಮಣ್ಣ

Filed under: ಮೈಸೂರಿನಿಂದ ಅಂಕಣ — Rasheed @ 6:55 pm

 

ramanna1.jpg

ಕುವೆಂಪು ಅವರಿಗೂ ಸೀನಿಯರ್ ಆಗಿದ್ದ ಹಾಸನ ಅಠಾಣಾ ರಾಮಣ್ಣನವರು ೧೦೫ ವರ್ಷ ಬದುಕಿ ನಿನ್ನೆ ರಾತ್ರಿ ಮೈಸೂರಿನಲ್ಲಿ ತೀರಿಹೋದರು.

ramanna-4.jpg

 ಅವರ ಕುರಿತು ಈ ಹಿಂದೆ ಬರೆದ ಬರಹಕ್ಕಾಗಿ ಇಲ್ಲಿ ಓದಿ

Monday October 22, 2007

ಮಾಜಿ ಮುಖ್ಯಮಂತ್ರಿಯ ಕಾದಂಬರಿಯೂ, ಬುರುಖಾ ಹಾಕಿದ ಹೆಂಗಸೂ

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 10:17 pm

ಮಂಗಳೂರಲ್ಲಿ ಹಳೆಯ ಮುಖ್ಯಮಂತ್ರಿಯೊಬ್ಬರ ಇನ್ನೊಂದು ಕಾದಂಬರಿಯ ಬಿಡುಗಡೆಯಿತ್ತು. ಕಾದಂಬರಿ ಬರೆದು ಮುಗಿಸಿದ ಮಾಜಿ ಮುಖ್ಯಮಂತ್ರಿ ಖುಷಿಯಿಂದ ಕಂಗೊಳಿಸುತ್ತಿದ್ದರು. ಕನ್ನಡ ಸಾಹಿತ್ಯಕ್ಕೆ ನಿಮ್ಮ ಮುಂದಿನ ಕೊಡುಗೆ ಏನು ಎಂದು ಕೇಳಿದರೆ ಒಂದು ಮಹಾಕಾವ್ಯಕ್ಕೆ ಸ್ಕೆಚ್ ಹಾಕಿಕೊಂಡಿರುವೆ ಎಂದು ಹೇಳಿದರು. ‘ಮಹಾಕಾವ್ಯ ಅಂದರೆ ಹದಿನೆಂಟು ಬಗೆಯ ವರ್ಣನೆಗಳು ಇರುತ್ತದಂತಲ್ಲಾ ಅದೆಲ್ಲವೂ ಇರುತ್ತದಾ?’ ಎಂದು ಕೇಳಿದೆ. ‘ಎಲ್ಲವೂ ಸಿದ್ಧವಾಗಿದೆ’ ಎಂದು ಹೇಳಿದರು. ‘ಇದಕ್ಕೆಲ್ಲ ಸಂಸ್ಕೃತ, ಪಾಲಿ ಇತ್ಯಾದಿ ಓದಿಕೊಂಡಿರಬೇಕಲ್ಲ’ ಎಂದು ಕೇಳಿದೆ. ‘ಎಲ್ಲವೂ ಆಗಿದೆ’ ಎಂದು ಹೇಳಿದರು. ‘ಹಾಗಾದರೆ ನಾವೆಲ್ಲ ಕನ್ನಡಕ್ಕೆ ಬರಲಿರುವ ಇನ್ನೊಂದು ಮಹಾಕಾವ್ಯಕ್ಕಾಗಿ ಕಾದುಕೊಂಡಿರುತ್ತೇವೆ’ ಎಂದೆ. ಅವರು ನಗುಮುಖದಿಂದ ಕೈಕುಲುಕಿ ಎದ್ದು ತಮ್ಮ ಹತ್ತಾರು ಹಿಂಬಾಲಕರೊಡನೆ ಹೊರಟುಹೋದರು.ayesha1.jpg

ಆಮೇಲೆ ನಾನು ತಲೆಗೆ ಏಟುಬಿದ್ದವನಂತೆ ಮಂಗಳೂರಿನ ಬೀದಿಗಳಲ್ಲಿ ಬೈಕು ಓಡಿಸುತ್ತಿದ್ದೆ. ಕೊಂಚ ಹೊತ್ತಲ್ಲಿ ಏನೇನೋ ನೋಡಿದೆ.

ಆದಿನ ರಂಜಾನ್ ಹಬ್ಬವಾಗಿತ್ತು. ಊರಿಗೆ  ಹೋಗಿ ತಾಯಿಯನ್ನು ನೋಡಿರಲಿಲ್ಲ. ಗುರುಪುರ ನದಿಯ ತೀರಕ್ಕೆ ಹೋಗಿ ದೋಣಿಯಲ್ಲಿ ನದಿ ದಾಟುತ್ತಿರುವ ಗಂಡಸರನ್ನು ಹೆಂಗಸರನ್ನು ನೋಡುತ್ತ ಕುಳಿತೆ. ಹೆಂಗಸರು ಬುರುಕ ಹಾಕಿಕೊಂಡು, ಗಂಡಸರು ಮಕ್ಕಳು ಅತ್ತರು ಪೂಸಿಕೊಂಡು ಹೊಸಬಟ್ಟೆ ಹಾಕಿಕೊಂಡು ದೋಣಿಯಲ್ಲಿ ಕುಳಿತು ಹೋಗಿ ಬರುತ್ತಿದ್ದರು.

 ಸಂಕಟಪಡಬಾರದು ಎಂದು ಎಲ್ಲರನ್ನೂ ನಗುಮುಖ ಮಾಡಿಕೊಂಡು ನೋಡಿಕೊಂಡು ಕುಳಿತೆ. ಇವನು ಯಾರೋ ಹೆಂಗಸರನ್ನು ನೋಡುವವನು ಎಂದು ಗಂಡಸರು ದುರುಗುಟ್ಟಿಕೊಂಡು ನೋಡುತ್ತಿದ್ದರು. ಅಲ್ಲಿ ನಿಲ್ಲಲಾಗದ ಮತ್ತೆ ತಿರುಗಾಡಲು ತೊಡಗಿದೆ. (more…)

Monday October 15, 2007

ಇನ್ನೊಂದು ಬಹಳ ಹಳೆಯ ಕವಿತೆ

Filed under: ಹಾಡು-ಪಾಡು — Rasheed @ 10:28 pm

ಅವಳು

avalu.jpg

ಚಂದವಿದ್ದಳು ಗೆಳೆಯ ಅವಳು

ಒಳ್ಳೆ ಮಜಬೂತು ಕುದುರೆ.

ಹಾರಂಗಿ ಅಣೆಕಟ್ಟು ಕಟ್ಟಿಟ್ಟ ನೀರು

ಬಿಟ್ಟಾಗ ನಗುವ ನಕ್ಷತ್ರ ಮೀನು.

ಅವಳು ಕೂದಲು ಬಿಚ್ಚಿಟ್ಟು ತುಟಿಯಲ್ಲಿ

ಕಚ್ಚಿ ಹೇರುಪಿನ್ನು, ನಗುವ ಹಾಗೆ

ಗಲ್ಲದಲ್ಲೊಂದು ಗುಳಿಯಿತ್ತು ಗೆಳೆಯ,

ತುಂಬು ಕೊರಳಿನ ತುಂಬ ಕಾಡು ಹಾಡು.

ಅವಳ ತಟ್ಟನೆಯ ತಿರುವು ತಿರುವುತ್ತ

ಹರಿವ ಕಪ್ಪು ಟಾರಿನ ದಾರಿ ತಗ್ಗು ಕೆಳಗೆ

ಅಲ್ಲಿ ಏಲಕ್ಕಿ ಮಲೆ ಕೆಂಪು ಕಾಫಿಯ ತೋಟ

ಹಸಿರು ಗಾಳಿಗೆ ಉಲಿವ ಬೇಲಿಯೊಳಗೆ

ಚೀಲ ಬುತ್ತಿಯ ತೋಳೆ ಬರಿ ಕಿತ್ತಳೆ.

Friday October 5, 2007

ಸಿಂಗರ್ ಮತ್ತು ಫಾಹಿಯಾನ್ ಯಾನೆ ಗಂಡಸರ ಕಷ್ಟಗಳು!

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 10:45 pm

 

faxian.jpg

ಇವತ್ತು ಇಲ್ಲೇ ತುರಾದ ಹತ್ತಿರದ ಒಂದು ಹಳ್ಳಿಗೆ ಹೋಗಿದ್ದೆ. ಯಾರೋ ಒಬ್ಬರು ‘ಬನ್ನೀ, ವಿಶ್ವ ಸ್ತನ್ಯಪಾನ ವಾರಾಚರಣೆ ಆಚರಿಸುತ್ತಿದ್ದೀವಿ’ ಅಂತ ಕರೆದಿದ್ದರು. ದಾರಿಯೇನೋ ತುಂಬಾ ಚೆನ್ನಾಗಿತ್ತು. ಮಳೆ ನಿಂತು ಬಿಸಿಲು ಚಾಚಿಕೊಂಡು ನೆಲದಿಂದ ಮೇಲಕ್ಕೆ ಮೋಡಗಳು ಎದ್ದು ನಿಂತು ಹಸಿರು ಬೆಟ್ಟಗಳು ಮೇಲೆ ಹರಡಿಕೊಂಡು ಎಲ್ಲಾ ಕನಸಿನ ಹಾಗೆ ಕಾಣುತ್ತಿತ್ತು. ಹಳ್ಳಿಗೆ ಹೋಗಿ ನೋಡಿದರೆ ಒಂದು ಸಣ್ಣ ಕೋಣೆಯ ಒಳಗೆ ಹತ್ತಾರು ಗ್ರಾಮಗಳ ತಾಯಂದಿರನ್ನು ಕೂರಿಸಿಕೊಂಡು ಒಬ್ಬ ಅಧಿಕಾರಿ ಇಂಗ್ಲೀಷಿನಲ್ಲಿ ಭಾಷಣ ಹೊಡೆಯುತ್ತಿದ್ದ. ಮಗುವಿಗೆ ಎದೆ ಹಾಲು ಉಣ್ಣಿಸುವುದು ಎಷ್ಟು  ಆರೋಗ್ಯಕಾರಿಮತ್ತು ಎಷ್ಟು ಮಿತವ್ಯಯಕಾರಿಅಂತ ವಿವರಿಸುತ್ತಿದ್ದ. ಅರ್ಥವಾಗದಿದ್ದರೂ ತಾಯಂದಿರು ತಲೆಯಾಡಿಸುತ್ತಿದ್ದರು.

ನನಗೆ ಯಾಕೋ ತಲೆನೋವು ಶುರುವಾಗಿತ್ತು. ಆ ತಲೆನೋವು ಇನ್ನೂ ಹೋಗಿಲ್ಲ. ಇಲ್ಲಿ ತಾಯಂದಿರು ಮಕ್ಕಳನ್ನು ಎಷ್ಟು ಪ್ರೀತಿಸುತ್ತಾರೆ ಅಂದರೆ ಗಂಡಂದಿರನ್ನು ಕೇರೇ ಮಾಡುವುದಿಲ್ಲ. ಹಗಲಿಡೀ ಮಗುವನ್ನು ಬೆನ್ನಿಗೆ ಕಟ್ಟಿಕೊಂಡು ಇರುಳಿಡೀ ಎದೆಗೆ ಒತ್ತಿಕೊಂಡು ನಮ್ಮನ್ನು ಹೇಳುವವರು ಕೇಳುವವರು ಯಾರು ಇಲ್ಲ ಎಂದು ಗಂಡಸೊಬ್ಬ ಮೊನ್ನೆ ಗೋಳು ಹೇಳಿಕೊಳ್ಳುತ್ತಿದ್ದ. (more…)

Saturday September 29, 2007

ಪುಟ್ಟ ಮೂರು ರೂಮಿ ಕವಿತೆಗಳು

Filed under: ಅನುವಾದಗಳು, ಹಾಡು-ಪಾಡು — Rasheed @ 11:54 pm

 

[ಮೌಲಾನಾ ಜಲಾಲುದ್ದೀನ್ ರೂಮಿ ಬದುಕಿದ್ದರೆ ಅವರಿಗೆ ನಾಳೆ ಭಾನುವಾರಕ್ಕೆ ಎಂಟುನೂರು ವರ್ಷಗಳಾಗುತ್ತಿತ್ತು.ರೂಮಿಯ ಕುರಿತು, ಅವರ ಹುಟ್ಟೂರಿನ ಕುರಿತು, ಈಗ ಆ ಊರು ಹೇಗಿದೆ ಎಂಬುದರ ಕುರಿತು ನೀವು ಬಿ.ಬಿ.ಸಿ ಯ ಈ ತಾಣವನ್ನು ನೋಡಬಹುದು .]

(more…)

Wednesday September 26, 2007

ಕತೆ ಮತ್ತು ಮಹಾತ್ವಾಕಾಂಕ್ಷೆ

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 11:47 pm

ಅಲ್ಲಿ ನಿಮ್ಮನ್ನೆಲ್ಲ ನೋಡಿ ತಿರುಗಿ ಬಂದು ಇಲ್ಲಿ ಷಿಲ್ಲಾಂಗ್ ಎಂಬ ನನ್ನ ಕನಸಿನ ಲೋಕದಲ್ಲಿ ಒಬ್ಬನೇ ಕುಳಿತು ಕೊಂಡಿದ್ದೇನೆ. ಹೂಬಿಟ್ಟಿದ್ದ ಮರಗಳಲ್ಲೆಲ್ಲಾ ಈಗ ಹಣ್ಣುಗಳು ತುಂಬಿಕೊಂಡಿವೆ. ಕಿತ್ತಳೆ ಮಾರುತ್ತಿದ್ದ ಹುಡುಗಿಯರೆಲ್ಲಾ ಈಗ ಎಂತ ಎಂತಹದೋ ಹಣ್ಣುಗಳನ್ನು ಬುಟ್ಟಿಯಲ್ಲಿ ತುಂಬಿಕೊಂಡು ಕುಳಿತಿದ್ದಾರೆ. ಮಳೆಬಿಟ್ಟು ಮತ್ತೆ ಮಳೆ ಸುರಿಯುತ್ತಿದೆ. ಇಂದು ಸಂಜೆ ಮಳೆಯ ನಡುವೆ ದಾರಿ ಮಾಡಿಕೊಂಡು ಎಲ್ಲ ಕಡೆ ಸುತ್ತಾಡಿ ಹಲವು ಬಗೆಯ ಹಣ್ಣುಗಳನ್ನು ಕೊಂಡು ಒಂದೊಂದನ್ನೇ ತಿನ್ನುತ್ತಾ ಕುಳಿತೆ. ಒಂದು ಹಣ್ಣಿನ ಹೆಸರು ಮಾತ್ರ ಗೊತ್ತಾಯಿತು. ಅದು ‘ಪ್ಲಂ’ ಹಣ್ಣು.plum.jpg ಬಾಕಿಯೆಲ್ಲಾ ಹೆಸರೇ ಗೊತ್ತಿಲ್ಲದ ಹಣ್ಣುಗಳು ನನ್ನ ಬಾಯಿಯಲ್ಲಿ. ನಗುಬಂತು. ಮತ್ತು ನೀವು ಬರೆದ ಪತ್ರಗಳ ಸಾಲುಗಳು ನೆನಪಾಯಿತು. “ನೀನು ಬರೆಯುವಾಗ ಹುಷಾರಿಗಿರಬೇಕು, ತುಂಬಾ ಜನ ನಿನ್ನ ಪತ್ರಗಳನ್ನು ಓದುತ್ತಾರೆ” ಅಂತ ಬರೆದಿದ್ದೀರಿ.

. ಇಲ್ಲಿ ನನಗೆ ಯಾರೂ ಇಲ್ಲ. ಇರುವುದು ನಿಮಗೆ ಪತ್ರ ಬರೆಯುವ ಖುಷಿ. ಇನ್ನೊಂದು ಎಲ್ಲಿ ಬೇಕೆಂದರಲ್ಲಿ ಎಗ್ಗಿಲ್ಲದೆ ಓಡಾಡುವ ಆನಂದ. ಇರುವ ಒಬ್ಬಳು ಹೆಂಡತಿಯನ್ನೂ ಯಾಕೋ ಕನ್ನಡ ನಾಡಿನಲ್ಲೇ ಬಿಟ್ಟು ಬಂದಿರುವೆ. ಬಂದು ಇಲ್ಲಿ ನೋಡಿದರೆ ಮೊದಲು ಚೆನ್ನಾಗಿ ಮಾತನಾಡುತ್ತಿದ್ದ ನಗುತ್ತಿದ್ದ ಹುಡುಗಿಯರೂ ಬಿಗುಮಾನದಿಂದ ಓಡಾಡುತ್ತಿದ್ದಾರೆ. ಯಾಕೋ ಒಂಟಿ ಗಂಡಸಿನ ಕುರಿತು ಈ ಊರಿನವರಿಗೆ ಸಲ್ಲದ ಅನುಮಾನ ಇರುವಂತಿದೆ. (more…)

Saturday September 22, 2007

ಒಂದು ಸ್ಟಾಕ್ ಹೋಂ ನೆನಪು

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 12:10 am

 

ಈ ಹೊತ್ತು ಒಬ್ಬಳು ಸುಂದರಿಯ ಕುರಿತು ಯೋಚಿಸುತ್ತಾ ಕುಳಿತಿರುವೆ. ನಾಳೆ ಅವಳ ಹುಟ್ಟು ಹಬ್ಬ. ಹಾಗಾಗಿ ಸಲೀಸಾಗಿ ನಿಮಗೆ ಬರೆಯಲೂ ಆಗುತ್ತಿಲ್ಲ. ಒಂದು ಕವಿತೆ ಬರೆಯಲಾ ಅನಿಸುತ್ತಿದೆ. ಹೋಗಲಿ ಬಿಡಿ ಅದೂ ಬೇಡ. ಸುಮ್ಮನೇ ಬರೆಯುತ್ತಾ ಸಲೀಸಾಗುತ್ತಾ ಹೋಗುತ್ತೇನೆ.

ಆಕೆಯನ್ನು ನಾನೂ ಕಂಡದ್ದು ಎರಡೇ ಸಲ. ಅದೂ ಸ್ವೀಡನ್ ನ ಸ್ಟಾಕ್ ಹೋಂ ಎಂಬ ಮಹಾನಗರದಲ್ಲಿ . ಎರಡೂ ಬಾರಿಯೂ ಅವಳು ಎಡಕಣ್ಣಿನ ಕೆಳಗೆ ಬೆಳ್ಳಿಯ ಬಣ್ಣದಿಂದ ನಕ್ಷತ್ರಗಳನ್ನು ಬರೆದುಕೊಂಡಿದ್ದಳು. ಅವಳ ಮೂಗಲ್ಲಿ ನತ್ತು ಇದ್ದಿರಬಹುದ ಎಂದು ಈಗ ನನಗೆ ಅನ್ನಿಸುತ್ತಿದೆ. ಒಂದು ಸಲ ಆಕೆ ನನ್ನನ್ನು ‘ಲೋಟಸ್’ ಎಂಬ ಪಬ್ ನಲ್ಲಿ ಕೂರಿಸಿ ಮಾತನಾಡಿದಳು. ಇನ್ನೊಂದು ಸಲ ಸ್ಟಾಕ್ ಹೋಮ್ ನ ಅರಮನೆಯ ಪಕ್ಕದ ಬೀದಿಯೊಂದರಲ್ಲಿ ನಡೆಸಿಕೊಂಡು ಹೋಗಿ ಆಮೇಲೆ ರೈಲು ಹತ್ತಿಸಿ ಮರೆಯಾದಳು.ಆಕೆ ಆ ನಗರದಲ್ಲಿ ಒಂಟಿ ಹುಡುಗಿ. ಆಕೆಯ ತಂದೆ ಪೋಲೆಂಡ್ ನಿಂದ ವಸಲೆ ಬಂದ ಯಹೂದಿ. ತಾಯಿ ಸ್ಕಾಂಡಿನೇವಿಯನ್ ಸುಂದರಿ. ತಂದೆಯ ಕಡೆಯವರೆಲ್ಲಾ ಹಿಟ್ಲರನ ಮಾರಾಣಹೋಮದ ಬೆಂಕಿಯಲ್ಲಿ ಬೆಂದು ಹೋದವರು.ಈ ಅಂದದ ಸುಂದರಿ ಹುಡುಗಿ ನನ್ನ ಜೊತೆನ ಮಾತನಾಡುವಾಗ ಕಂಪಿಸುತ್ತಾ ಅವಳ ಕೈಯಲ್ಲಿದ್ದ ಕಾಫಿಯ ಬಟ್ಟಲು ಅಲುಗಿ ಮೈಯೆಲ್ಲಾ ಚೆಲ್ಲಿ ಆಮೇಲೆ ಸ್ಸಾರಿ  ಅಂತ ನಕ್ಕಿದ್ದಳು. ನಾನು ಆಕೆಯ ಕೈಯಲ್ಲಿ ಕನ್ನಡದ ನನ್ನ ಕತೆಯ ಪುಸ್ತಕವೊಂದನ್ನು ಕೊಟ್ಟು ‘ಪ್ರೀತಿಯಿಂದ’ ಅಂತ ಸಹಿ ಮಾಡಿ ಕಂಪಿಸುತ್ತಾ ಆ ಮಹಾ ಆಕಾಶದ ಕೆಳಗೆ ಒಬ್ಬನೇ ಕಣ್ಣು ತುಂಬಿಕೊಂಡು ಬಂದಿದ್ದೆ.ಯಾಕೋಈಗ ಅವಳ ನೆನಪಾಗುತ್ತಿದೆ. ಸುಮ್ಮನೇ ಕುಳಿತು ರಿಲ್ಕ್ ಕವಿಯನ್ನು ಅನುವಾದಿಸುತ್ತಿರುವೆ.  (more…)

Monday September 17, 2007

ಬಾಲ್ಯ ಕಾಲದ ಒಂದು ಕವಿತೆ

Filed under: ಹಾಡು-ಪಾಡು — Rasheed @ 9:47 pm

ಮತ್ತೇ ಬರುವೆನು ಹೆಣ್ಣೇ..

ಮತ್ತೆ ಬರುವೆನು ಹೆಣ್ಣೆ ಮರಳಿ ನಿನ್ನಲ್ಲಿಗೆನಿನ್ನ ಬೆಳ್ಳಿ ಉಡಿಪಟ್ಟ ಎದೆ ತುಂಬಿತುಳುಕುವ ಕುಪ್ಪಾಯ, ಮುಂಡು ತುಣಿಯೊಳಗುಕ್ಕುವ ಕಾವ್ಯಕ್ಕೆ ರೇಕು ತುಂಬಿಸಲಿಕ್ಕೆ. (more…)

Monday September 10, 2007

ದೇವದೂತರ ಆಡುಭಾಷೆ!

Filed under: ಷಿಲ್ಲಾಂಗಿನಿಂದ ಲಂಕೇಶ — Rasheed @ 11:09 pm

ಮೇಘಾಲಯ ಎಂಬ ಈ ಪುಟ್ಟ ರಾಜ್ಯದ ರಾಜಕೀಯ ಇಡೀ-ವಾರ ನನ್ನ ತಲೆಯನ್ನು ತಿಂದು ಹಾಕಿಬಿಟ್ಟಿತು. ಮೂವರು ಮಂತ್ರಿಗಳು ಹೇಳದೆ ಕೇಳದೆ ಮುಖ್ಯಮಂತ್ರಿಯನ್ನು ಬಿಟ್ಟು ಎದುರುಪಾರ್ಟಿಯನ್ನು ಸೇರಿಕೊಂಡು ಬಿಟ್ಟಿದ್ದಾರೆ. ಎಪ್ಪತ್ತೇಳು ವರ್ಷದ ಮುಖ್ಯಮಂತ್ರಿ ಬಿದ್ದು ಹೋಗುವ ಸ್ಥಿತಿಯಲ್ಲಿದ್ದಾರೆ. ನಾನು ‘ಏನು ಕತೆ ನಿಮ್ಮ ಪರಿಸ್ಥಿತಿ ವೀಕ್ ಆಗಿ ಬಿಟ್ಟಿದೆಯಲ್ಲ’ ಅಂತ ಕೆಣಕಿದೆ. ಅವರು ತಟ್ಟನೆ ಶರಟಿನ ತೋಳು ಮಡಚಿ ತೋಳು ಬಲ ತೋರಿಸುತ್ತಾ ‘ಏನು ವೀಕ್ ಆಗಿದ್ದೇನಾ ನೋಡು’ ಅಂತ ನನ್ನ ಹೊಟ್ಟೆಗೆ ಪಂಚ್ ಮಾಡಲು ಬಂದರು. ನಾನು ನಗುತ್ತಾ ಬದಿಗೆ ಸೇರಿದೆ.meghalaya-map.gifಇಲ್ಲಿನ ಜನ ಹೀಗೆಯೇ. ಎಂತಹ ಅತಂತ್ರ ಸ್ಥಿತಿಯಲ್ಲೂ, ಎಂತಹ ಮುಖ್ಯ ಮಂತ್ರಿಯಾದರೂ ನಗು ಮತ್ತು ಚೇಷ್ಟೆ ಬಿಡುವುದಿಲ್ಲ.  ಇವರೆಲ್ಲರ ಹಿಂದೆ ತಿರುಗಾಡಿ ನನಗಂತೂ ತಲೆಕೆಟ್ಟು ಹೋಗಿತ್ತು. ಬಾಯಿತೆಗೆದರೆ ಮಂತ್ರಿಗಳ ಹೆಸರು. ತಲೆಯೊಳಗೆ ಎಂ.ಎಲ್.ಎಗಳು ಯಾವ ಸಹವಾಸವೂ ಬೇಡ ಅಂತ ಈವತ್ತು ಮಧ್ಯಾಹ್ನ ಬಾಗಿಲು ಹಾಕಿಕೊಂಡು ಕಿಟಕಿ ತೆಗೆದು ಬಿಸಿಲನ್ನು ಒಳಗೆ ಬಿಟ್ಟುಕೊಂಡು ಸುಮ್ಮನೆ ಕುಳಿತಿದ್ದೆ. ಎಂತಹ ಒಳ್ಳೆಯ ಬಿಸಿಲು! ಮಟಮಟಮಧ್ಯಾಹ್ನದಲ್ಲೂ ಮೈಮೇಲೆ ಹರಡಿಕೊಂಡು ಕೂರಬಹುದು. ಹಾಗೇ ತುಂಬಾ ಹೊತ್ತು ಕೂತಿದ್ದೆ. ಆಮೇಲೆ ಮಳೆ ಬರಲು ತೊಡಗಿತು.ಹೋಗಲಿ ಬಿಡಿ ಪ್ರತಿವಾರ ಮೋಡ  ಬಿಸಿಲು ಮಳೆ ಹೂವು ಅಂತ ಬರೆದು ನಾನೂ ನಿಮ್ಮ ತಲೆ ಹಾಳು ಮಾಡುತ್ತಿದ್ದೇನೆ. ಶಿವಮೊಗ್ಗದ ನಿಮ್ಮ ಊರಿನ ಹತ್ತಿರ ಹನುಮಂತಪ್ಪ ಅಂತ ನನ್ನ ಸಖನೊಬ್ಬನಿದ್ದಾನೆ. ಈ ಸಲ ಭತ್ತ ಮಾರಿ ಆ ಹಣದಲ್ಲಿ ವಿಮಾನ ಹತ್ತಿ ನಿನ್ನ ಹತ್ತಿರ ಬರುತ್ತೇನೆ ಅಂದವನು ಪತ್ತೆಯೇ ಇಲ್ಲ. ನನಗೆ ಯಾಕೋ ಅವನ ಭತ್ತ ಏನಾಯಿತು ಅಂತ ಚಿಂತೆ ಶುರುವಾಗಿದೆ.ಆಮೇಲೆ ಇನ್ನೊಂದು ವಿಷಯ. ನೀವು ನನ್ನನ್ನು ಕಳೆದವಾರ ‘ಸಾಬಿ’ ಅಂತ ಬರೆದಿದ್ದೀರಂತೆ. (more…)

Thursday September 6, 2007

ಹಾಫಿಝನ ಒಂದು ಕವಿತೆ

Filed under: ಅನುವಾದಗಳು — Rasheed @ 10:52 pm

ಅಷ್ಟೊಂದು ಅರಿತೆhafiz_p.jpg

ಅರಿತೆ
ಅಷ್ಟೊಂದು
ಪಡೆದವನಿಂದ
ಇನ್ನು ನನ್ನ ನಾ
ಅರಿಯೆ
ಕ್ರೈಸ್ತ, ಹಿಂದು,ಮುಸಲ್ಮಾನ
ಬೌದ್ಧ, ಯಹೂದ್ಯ ಏನೆಂದೂ.

ಸತ್ಯ ಅಷ್ಟೊಂದು
ಹಂಚಿಕೊಡಿತು ಒಳಗೆ
ಇನ್ನು ಕರೆಯಲಾರೆ ಎನ್ನ
ಗಂಡೆಂದು,ಹೆಣ್ಣೆಂದು,ಜಿನ್ನೆಂದು
ಅಥವಾ ಬರಿಯ
ಆತ್ಮವೆಂದೂ.
 
ಪ್ರೇಮವೆಂಬುದು ಅಷ್ಟೊಂದು
 ಹಚ್ಚಿಕೊಂಡಿದೆ ಹಫೀಝನನ್ನು
ಅದು ಬೂದಿಯಾಗಿದೆ ನಾನು
ನಿರ್ಬಂಧಿ
ಸಕಲ ತತ್ವಗಳಿಂದ,ಪ್ರತಿಮೆಗಳಿಂದ
ಇದುವರೆಗೆ ಅರಿತದ್ದರಿಂದ.            
         
                                   

Wednesday September 5, 2007

ಟರ್ಕಿ ಕೋಳಿಗಳ ನೆನಪು

male-turkey.jpgಯಾಕೋ ಸಣ್ಣಗೆ ನಗುಬರುತ್ತಿದೆ. ನಾನು ಪ್ರತಿವಾರವೂ ಕುಡುಮಿಯ ಹಾಗೆ ಹಠ ಹಿಡಿದು ನಿಮಗೆ ಪತ್ರಬರೆಯುವುದು.  ಕೆಲವರು  ಗೆಳೆಯರು ಇನ್ನು ಈತ ಕತೆಯೂ ಬರೆಯಲಾರ ಕವಿತೆಯೂ ಬರೆಯಲಾರ ಬರೀ ಪತ್ರ ಬರೆದು ಹಾಳಾಗಿ ಹೋಗುತ್ತಿರುವ, ಎಂದು ವಿನಾಕಾರಣ ಹಲುಬುವುದು,- ಎಲ್ಲವನ್ನೂ ಯೋಚಿಸಿ ಯೋಚಿಸಿ ಈವತ್ತು ಚಪಾತಿ ಲಟ್ಟಿಸಿತ್ತಾ ಕೂತಿದ್ದೆ. ಆಗಲೂ ನಗುಬರುತ್ತಿತ್ತು. ಚಪಾತಿ ನಾನು ಮಾಡಿದರೂ ಗುಂಡಗೆ ಆಗುತ್ತದೆ. ನಾನು ಮಾಡಿದ ದೋಸೆಯಲ್ಲೂ ತೂತುಗಳಿರುತ್ತದೆ ಎಂದೆಲ್ಲಾ ಗುನುಗುತ್ತಿದ್ದೆ.ಊರಿಗೆ ಹೋಗಿದ್ದಾಗ ನನ್ನ ಉಮ್ಮನಿಗೆ ಇಲ್ಲಿ ಷಿಲ್ಲಾಂಗಿನಲ್ಲಿ  ಒಳ್ಳೆ ಒಳ್ಳೆಯ ಬಾತುಕೋಳಿಗಳಿವೆ ಅಂತ ಹೇಳಿಬಿಟ್ಟಿದ್ದೆ. ಆಕೆ ಬೇರೆ ಏನೂ ಕೇಳದವಳು `ಅಯ್ಯೋ ನೀನು ಬರುವಾಗ ಬಾತುಕೋಳಿಯ ಮೊಟ್ಟೆಗಳನ್ನು ತರಬೇಕಾಗಿತ್ತು. ಇಲ್ಲಿ ಕಾವು ಕೊಟ್ಟು ಮರಿ ಮಾಡುತ್ತಿದ್ದೆ’ ಅಂತ ಹಂಬಲಿಸಿದ್ದಳು.ತುಂಬಾ ವರ್ಷಗಳ ಹಿಂದೆ ನನ್ನ ಬಾಪಾ ಎಲ್ಲಿಂದಲೋ ಟರ್ಕಿ ಕೋಳಿಯ ಮೊಟ್ಟೆಗಳನ್ನು ಹೀಗೇ ತಂದುಕೊಟ್ಟಿದ್ದರು. ಉಮ್ಮ ಅವುಗಳನ್ನು ಕಾವಿಗೆ ಬಂದ ಊರು ಕೋಳಿಯ ಹೊಟ್ಟೆಯ ಕೆಳಗೆ ಇಟ್ಟು ಕೊನೆಗೆ ಒಂದೇ ಒಂದು ಮರಿ ಹೊರಗೆ ಬಂದಿತ್ತು. ನೋಡಿದರೆ ಅದೊಂದು ಗಂಡು ಟರ್ಕಿ ಕೋಳಿಮರಿ. ಬಹುಶಃ ನೀವು ಟರ್ಕಿಕೋಳಿ ನೋಡಿರಲಿಕ್ಕಿಲ್ಲ.ತುಂಬಾ ಎತ್ತರಕ್ಕೆ ಬೆಳೆಯುತ್ತದೆ. ಆ ಗಂಡು ಟರ್ಕಿಕೋಳಿಯಂತೂ ತುಂಬಾ ಬೆಳೆದು ಅದರ ಕೊರಳೆಲ್ಲಾ ಕೆಂಪುಕೆಂಪಗೆ ಮಾಂಸದ ಗಂಟುಗಳಿಂದ ತುಂಬಿಕೊಂಡು ಅದಕ್ಕೆ ಸಿಟ್ಟು ಬಂದಾಗ ಇನ್ನಷ್ಟು ಕೆಂಪಾಗಿ, ಹೋಗುವವರನ್ನು ಬರುವವರನ್ನು ಅಟ್ಟಿಸಿಕೊಂಡು ಓಡಾಡುತ್ತಿತ್ತು. ಹೆಣ್ಣು ಮಕ್ಕಳನ್ನಂತೂ ಅದಕ್ಕೆ ಕಂಡರಾಗುತ್ತಿರಲಿಲ್ಲ. ನನ್ನ ಸಣ್ಣ ಸಣ್ಣ ತಂಗಿಯಂದಿರನ್ನು ಅಟ್ಟಿಸಿ ಅವರು ಬಿದ್ದು ಗಾಯ ಮಾಡಿಕೊಂಡು, ನನ್ನ ಉಮ್ಮನಿಗೆ ತಲೆಕೆಟ್ಟು ಹೋಗಿ ಆಮೇಲೆ ಬಾಪಾ ಎಲ್ಲಿಂದಲೋ ಒಂದು ಹೆಣ್ಣು ಟರ್ಕಿಕೋಳಿಯನ್ನು ತಂದು ಬಿಟ್ಟಿದ್ದರು. ಆಮೇಲೆ ಅವುಗಳು ತುಂಬಾ ಕಾಲ ಅನ್ಯೋನ್ಯವಾಗಿದ್ದವು.ಆಮೇಲೆ ಏನಾಯಿತು ಎಂಬುದು ನೆನಪಾಗುತ್ತಿಲ್ಲ.  (more…)

Next Page »

Blog at WordPress.com.