The Mysore Post

Tuesday January 30, 2007

ಪಂಡಿತಪ್ಪಸ್ವಾಮಿಗೆ ಕಾಯುತ್ತಾ ಬೋಟಿ ಬಜಾರಿನಲ್ಲಿ…

Filed under: ಮೈಸೂರಿನಿಂದ ಅಂಕಣ — Rasheed @ 12:11 pm

pandithswamy.jpg

ಯಾಕೋ ಸಣ್ಣಗೆ ಚಳಿಯಾಗುತ್ತಿತ್ತು. ಹಲ್ಲುಪುಡಿ ಮಾರುವ ಪಂಡಿತಪ್ಪ ಸ್ವಾಮಿಯನ್ನು ಹುಡುಕುತ್ತಾ ಹೊರಟವನು ಬೋಟೀ ಬಜಾರಿನಲ್ಲಿ ಕುರಿ, ಕೋಳಿ, ಮೀನು, ಸಾರಾಯಿ, ಮೂಸಂಬಿ, ರಸಬಾಳೆ, ಮರಗೆಣಸು, ಮಲ್ಲಿಗೆ, ಸೇವಂತಿಗೆ ಮಾರುವ ಈ ಗಲೀಜು ರಸ್ತೆಯಲ್ಲಿ ಬೈಕು ನಿಲ್ಲಿಸಿ ಆಕಾಶ ನೋಡುತ್ತ ಕುಳಿತಿದ್ದೆ. ನೋಡಲು ಬಲು ಖುಷಿಯಾಗುತ್ತಿದ್ದ ಬೊಜ್ಜು ಬಾಯಿಯ ಶ್ಯಾಮವರ್ಣದ ಮುದುಕಿ ಎಂದಿನಂತೆ ತನ್ನ ಆಕರ್ಷಕ ನಗು ನಗುತ್ತಾ ನಡುನಡುವಿನಲ್ಲಿ ದೀನಳಾಗಿ ನೋಡುತ್ತಾ ಭಿಕ್ಷೆ ಎತ್ತುತ್ತಿದ್ದಳು.

ಕಳೆದ ವಾರ ಇಂತಹದೇ ಒಂದು ಸಂಜೆ ಸೊಗಸುಗಾರನಂತೆ ಕಾಣುತ್ತಿದ್ದ ಸಾಮಾಜಿಕ ಕಾಳಜಿ ಯನ್ನೂ ಹೊಂದಿದ್ದ ಯುವಕನೊಬ್ಬ ಹಸಿದಿದ್ದ ಈ ಮುದುಕಿಗೆ ಭಿಕ್ಷೆಯ ಬದಲು ದೊಡ್ಡದಾದ ಕೇಕ್‌ ತುಂಡೊಂದನ್ನು ತಿನ್ನಲು ಕೊಟ್ಟು `ಭಿಕ್ಷೆ ಬೇಡ ಬಾರದು ಅಜ್ಜೀ ಎಲ್ಲಾದರೂ ಅನಾಥಾಶ್ರಮ ಸೇರು’ ಅಂತ ಬುದ್ಧಿ ಹೇಳುತ್ತಿದ್ದ. `ಅಯ್ಯೋ ಅದೊಂದನ್ನು ಮಾತ್ರ ಹೇಳಬೇಡ ಕಂದಾ’ ಎಂದು ಅಜ್ಜೀ ಅವನಿಗೆ ಬುದ್ಧಿ ಹೇಳುತ್ತಿದ್ದಳು. ಅವಳ ಪ್ರಕಾರ ಅನಾಥಾಶ್ರಮದಲ್ಲಿ ಸತ್ತು ಹೋದರೆ ಮೃತ ದೇಹವನ್ನು ಆಸ್ಪತ್ರೆಗೆ ಎಸೆದು ಹೋಗುತ್ತಾರಂತೆ. ಆದರೆ ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಾ ಸತ್ತು ಹೋದರೆ ನಾಲ್ಕು ಮಂದಿ ಒಳ್ಳೆಯವರು ಚಂದಾ ಎತ್ತಿ ಚಟ್ಟಿ ಕಟ್ಟಿ ಸ್ಮಶಾನಕ್ಕೆ ಒಯ್ದು ಸದ್ಗತಿ ಒದಗಿಸುತ್ತಾರಂತೆ. ಅವಳ ವಾದ ಸರಣಿ ಅರ್ಥವಾಗದ ಆ ಯುವಕ ಸುಮ್ಮನಾಗಿ ಸಿಗರೇಟು ಹಚ್ಚಿಕೊಳ್ಳಲು ಹೋಗಿದ್ದ. (more…)

Monday January 22, 2007

ಗುಮ್ ನಾಮ್ ಬಾದಶಾನ ಗುಡ್ಡದಲ್ಲಿ

Filed under: ಮೈಸೂರಿನಿಂದ ಅಂಕಣ — Rasheed @ 1:05 pm

ನಿಮ್ಮ ಸೂಫಿ ಸಂತನ ಹೆಸರೇಕೆ ಗುಮ್‌ನಾಮ್‌ ಬಾದಶಾ ಎಂದಿದೆ ಎಂಬ ಸರಳ ಪ್ರಶ್ನೆಗೆ ಅಷ್ಟೇ ಸರಳವಾಗಿ ನಿನ್ನ ಹೆಸರೇನು?- ಎಂದು ಸೂಫಿ ಮಹಮ್ಮದ್‌ ರೂಹುಲ್ಲಾ ಶಾ ಖಾದ್ರಿ ನನ್ನನ್ನು ಕೇಳಿದರು.

ನಾನು ನನ್ನ ಹೆಸರು ಹೇಳಿದೆ.

ನಿನ್ನ ವಯಸ್ಸು ಎಷ್ಟು?

ಅದನ್ನೂ ಹೇಳಿದೆ.

ಅದಕ್ಕೂ ಮೊದಲು ನಿನ್ನ ಹೆಸರೇನಾಗಿತ್ತು?

ನಾನು ಸುಮ್ಮನೆ ಅವರ ಮುಖ ನೋಡಿದೆ.

ನೀನು ಇನ್ನು ಎಷ್ಟು ವರ್ಷ ಬದುಕಬಹುದು?

ಹೆಚ್ಚು ಕಡಿಮೆ ಅದನ್ನೂ ಹೇಳಿದೆ.

ಆನಂತರ ನಿನ್ನ ಹೆಸರೇನಿರಬಹುದು? (more…)

ಒಂಟಿ ಸಲಗ ಮತ್ತು ಒಬ್ಬರು ಸ್ತ್ರೀ

Filed under: ಮೈಸೂರಿನಿಂದ ಅಂಕಣ — Rasheed @ 11:45 am

ಆ ಒಂಟಿ ಸಲಗ ನನ್ನನ್ನು ಹೂವಿನಂತೆ ಆಕಾಶದಲ್ಲಿ ಹತ್ತು ಅಡಿ ಎತ್ತರಕ್ಕೆ ಎಸೆಯಿತು. ಚೆಂಡಿನಂತೆ ಕಾಡಿನೊಳಕ್ಕೆ ಅಷ್ಟು ದೂರ ಕಾಲಿನಿಂದ ದೂಡಿತು, ಸೊಂಡಿಲಿನಿಂದ ಎತ್ತಿ ದಂತಗಳ ಮೇಲೆ ಕೂರಿಸಿತು, ನೆಲದಲ್ಲಿ ಮಲಗಿಸಿ ದೂರದಿಂದ ನೋಡಿತು… ಒಟ್ಟಿನಲ್ಲಿ ಈಗ ಯೋಚಿಸಿದರೆ ಆ ಒಂಟಿಸಲಗ ನನ್ನನ್ನು ಓರ್ವ ಪ್ರೇಮಿಯಂತೆ ಒಂದೂವರೆ ತಾಸುಗಳ ಹೊತ್ತು ಕಾಡಿಸಿತ್ತು’.

ನಡುವಯಸ್ಸಿನ ಆ ಮಹಿಳೆ ಸುಮಾರು ಹದಿನೈದು ವರ್ಷಗಳ ಆನಂತರ ಆ ಘಟನೆಯನ್ನು ನೆನಪಿಸಿಕೊಂಡು ನಿರ್ವಿಕಾರವಾಗಿ ವಿವರಿಸುತ್ತಿದ್ದರು. ನಾನು ಬಾಯಿಬಾರದವನಂತೆ ಹೂಂಗುಟ್ಟುತ್ತಿದ್ದೆ. ಅವರು ನಡೆದ ಕಥೆಯೆಲ್ಲವನ್ನೂ ಒಂದೇ ಉಸಿರಿನಲ್ಲಿ ಹೇಳಿ ಮುಗಿಸುವ ಉತ್ಸಾಹದಲ್ಲಿದ್ದಂತೆ ಕಂಡಿತು. ಅವರ ಉತ್ಸಾಹಕ್ಕೆ ಒಂದಿಷ್ಟು ಕಡಿವಾಣ ಹಾಕುವುದು ಬಾನುಲಿ ತಂತ್ರದ ದೃಷ್ಟಿ ಯಿಂದ ಉತ್ತಮ ಎಂದು ಅನಿಸಿ `ನಾಗರಹೊಳೆ ಕಾಡಿ ನಲ್ಲಿ ಹೀಗೆ ನಿಮ್ಮ ಮೇಲೆ ಒಂಟಿ ಗಂಡಾನೆಯ ಅಂಗ ಚೇಷ್ಟೆ ನಡೆಯುತ್ತಿರುವಾಗ ನಿಮ್ಮ ಪತಿ ಏನು ಮಾಡುತ್ತಿ ದ್ದರು?’ ಎಂದು ಕೇಳಿದೆ. (more…)

Blog at WordPress.com.