ಕಲಬುರ್ಗಿಯ ಬಂದೇ ನವಾಝ್ ದರ್ಗಾದಲ್ಲಿ ಮಂಡಿಯೂರಿ ಕುಳಿತು ಒಂದು ಕವಿತೆ

ಹೇ ಬಂದೇ ನವಾಜ್

sufi_dancing1.jpg

ಈ ವಿಷವನ್ನು ಪೇಯದಂತೆ ಕುಡಿಯಲು ಬಿಡು,

ಒಂದು ತೊಟ್ಟೂ ನೆಲದಲ್ಲಿ ಹಿಂಗದಂತೆ.

ಈಗಿಂದೀಗಲೇ ಬಿಕ್ಷೆಯ ಬಟ್ಟಲನ್ನು ಹಿಡಿದು ನಡೆವ ಧೈರ್ಯ ಕೊಡು.ಈ ಗಿಡುಗನ ಉಡುಪನ್ನು ಕಳಚಿ ಬಿಡುವೆನು

ಪಾರಿವಾಳದ ದಿರಿಸನ್ನು ತೊಡಿಸು ನನಗೆ ಹೇ ಬಂದೇನವಾಜ್.

ನಿನ್ನ ಪಹಾಡಿನ ಹರಳು, ನಿನ್ನ ವನದ ಸಂಪಿಗೆಯ ಕರಿಯ ಬೀಜ,

ನಿನ್ನ ಫಕೀರರ ಹಾಡು,ಚಿಲುಮೆಯ ಹೊಗೆ,ಕೈಯ ಕೋಳ, ಕಾಲ ಕಡಗ,

ನಿನ್ನ ಹತ್ತೂ ಬೆರಳಿನ ಮಾಯದುಂಗುರ -

ನನ್ನ ಇಲ್ಲದಂತಾಗಿಸು ಹೇ ಬಂದೇ ನವಾಜ್.

pabad001sm.jpg

 ನಿನ್ನ ಗೋರಿಗಳ ನಡುವೆ ಹಾಲು ಊಡುತ್ತ,ಕಾಲು ಆಡಿಸುತ್ತ ಮಲಗಿರುವ ಮಗುವಿನ ನಗು.

ಹಾಲ ಊಡಿಸುತ್ತಿರುವ ಮುಸುಕಿನೊಳಗಿನ ಕಣ್ಣುಗಳ ಕಳ್ಳ ಆಟ.

ನಿನ್ನ ಗೋಡೆಗಳಿಗೆ ತಲೆ ಘಟ್ಟಿಸಿಕೊಳ್ಳುತ್ತಿರುವ ತಲೆಕೆಟ್ಟ ಹೆಣ್ಣುಮಗಳ ಚೀತ್ಕಾರ.

ಈ ಸ್ಮಶಾನದ ಆನಂದವನ್ನು ಅನುಭವಿಸಲು ಬಿಡು, ಹೇ ಬಂದೇ ನವಾಜ್.

ಈಗಿಂದೀಗಲೇ ಬಿಕ್ಷಾಪಾತ್ರವನ್ನು ಹಿಡಿದು ನಡೆವ ಧೈರ್ಯ ಕೊಡು. 

ಕನಸಲ್ಲಿ ನಿನ್ನ ಖರಪುಟಗಳ ಸದ್ದು,ಆಕಾಶದಲ್ಲಿ ಹಾಹಾಕಾರ,

ಒಡೆದಕಾಲುಗಳ ಸವರುತಿರುವ ಎಳ್ಳು ಹೂವುಗಳ ಪರಾಗ,ನಸುನಗು,ಕದ್ದು ಕೂಡಿರುವ ಜವ್ವನಿಗರ

ಪಿಸುಮಾತು,ಎಲ್ಲಿಂದಲೋ ಎದ್ದು ನಿಂತಿರುವ ಅರೆ ಕಳಾಹೀನ ಚಂದ್ರ,

ಈಗ ತಾನೇ ಮೈಕೊಟ್ಟು ಬಂದಿರುವ ವಕ್ರಮೂಗಿನ ಬಿಕ್ಷುಕಿಯಮಿಂಚುತಿರುವ ಮೂಗ ನತ್ತು-

 ನಾ ಪರಾದೀನ.ನಿನ್ನ ಪಾದಗಳಲಿ ಹಣೆಯಿಟ್ಟು ಚುಂಬಿಸುತಿರುವೆ ನನ್ನನೇ ನಾನು.

ಈ ಆನಂದವನು ನನ್ನೊಳಗೂ ಹರಿದು,ಹೊರಗೂ ಇಳಿದು,315949_t.jpg

ಈ ಅರೆ ಚಂದ್ರ ಇರುಳು ಈ ನಕ್ಷತ್ರ ರಾತ್ರಿ,ಈ ಮಿಂಚಿಲ್ಲದ ಸದ್ದಿಲ್ಲದ ಆಗಸದಲ್ಲಿ ತೋರಿಸು ನಿನ್ನ ಇರವು 

ನಿನ್ನ ಗಾಳಿ ನಿನ್ನ ಬೆಳಕು,ನಿನ್ನ ಊರಿದ ಪಾದದ ಕೆಳಗೆ ಅಗಾಧಮುಳ್ಳಿನ ಪಾದುಕೆ ಈ ಭೂಮಿ.

ನಿನ್ನ ಶಹರಿನ ಬೀದಿಗಳಲ್ಲಿ ಅನವರತ ಅಲೆಯುವ ಪ್ರೇತಾತ್ಮರು ನಿನ್ನ ಸಖಿಯರು

ಬೊಗಸೆಯಲ್ಲಿ ಹರಿವ ಬೆಂಕಿ, ಚೆಲುವ ಚೆಲ್ಲುತ್ತ ಹಸಿಯ ಮಾಂಸ ನೆತ್ತರು ಹೊತ್ತು ನಡೆಯುತ್ತಿರುವಈ ಚೆಲುವೆಯರು.ಆಹಾ ಇವರ ಕಣ್ಣುಗಳು.ಇವರ ಗಾಢ ಬೆವರು.

ನಿನ್ನ ಮಣ್ಣ ಹಿಡಿ ದೂಳ ಕದಲಿಸದೆಚಲಿಸುತ್ತಿರುವ ಇವರ ಪಾದ ಪಕ್ಷಿಗಳು.

ಕಣ್ಣಿಂದ ಕಾಣಿಸುತ್ತಿರುವ ಎಲ್ಲವ ಇಲ್ಲದಂತಾಗಿಸು ಹೇ ಗೇಸುದರಾಜ್ 

ನಾ  ಇಲ್ಲಿಂದ ಹೋಗುತಿರುವೆನು,

ಇಲ್ಲದ ಆ ಇನ್ನೊಂದು ಶಹರಿನ ದಾರಿ ತೋರಿಸು,

ಹೇ ಬಂದೇ ನವಾಜ್.

 

5 Responses to “ಕಲಬುರ್ಗಿಯ ಬಂದೇ ನವಾಝ್ ದರ್ಗಾದಲ್ಲಿ ಮಂಡಿಯೂರಿ ಕುಳಿತು ಒಂದು ಕವಿತೆ”

  1. beautiful

  2. ishtondu jigupse eegale beDa…!!

    ….iri,iri…ellige hogodu?…..

    namma meluu karuNe idi.. allaah ke bande..!!…. :)

  3. ಓದುತ್ತ ಓದುತ್ತ ಎಲ್ಲೆಲ್ಲೋ ಪಯಣಿಸಿ ಮನಸು ಇದ್ದಲ್ಲಿಗೆ ವಾಪಸ್ ಬಂದಿದೆ… ಈ ಯಾನ ಹೇಗಿತ್ತು ಅಂತ ವರ್ಣಿಸಲು ನನ್ನಂತಹ ಪಾಮರಳಿಗೆ ಅಸಾಧ್ಯ…

  4. ಚೆನ್ನಾಗಿದೆ ಅಂತ ಹೇಳಿದರೆ ಕಡಿಮೆಯಾಗುತ್ತದೆ. ಹೇಗೆ ಚೆನ್ನಾಗಿದೆ ಎಂದು ವರ್ಣಿಸಲು ಹೊರಟರೆ ವಿಮರ್ಶಕನಾಗಿಬಿಡುವ ಅಪಾಯವಿದೆ. ಆದರೆ ಹೇಗೆ ಬರೆಯದೇ ಇರುವುದು…

  5. ಪ್ರಿಯ ರಶೀದ್,

    ಮನಸು ಮಂಡಿಯೂರಿ ಕುರಿತಿದೆ ನಿಮ್ಮ ಕವಿತೆಯ ಮುಂದೆ,

    …ಈ ಗಿಡುಗನ ಉಡುಪನ್ನು ಕಳಚಿ ಬಿಡುವೆನು
    ಪಾರಿವಾಳದ ದಿರಿಸನ್ನು ತೊಡಿಸು ನನಗೆ ಹೇ ಬಂದೇನವಾಜ್.
    …ಒಡೆದಕಾಲುಗಳ ಸವರುತಿರುವ ಎಳ್ಳು ಹೂವುಗಳ ಪರಾಗ
    …ನಿನ್ನ ಮಣ್ಣ ಹಿಡಿ ದೂಳ ಕದಲಿಸದೆಚಲಿಸುತ್ತಿರುವ ಇವರ ಪಾದ ಪಕ್ಷಿಗಳು.

    ಇಲ್ಲದ ಆ ಇನ್ನೊಂದು ಶಹರಿನ ದಾರಿ ತೋರಿಸು,
    ಹೇ ಬಂದೇ ನವಾಜ್…

    ಮನಸು ಮಂಡಿಯೂರಿ ಕುಳಿತಿದೆ,
    ಕುಳಿತುಕೊಂಡೇ ಎದ್ದು ಹೊರಟಿದೆ ಇಲ್ಲದ ಆ ಇನ್ನೊಂದು ಶಹರಿನ ದಾರಿ ಹುಡುಕುತ್ತಾ..

Leave a Reply