ಈವತ್ತು ಊರಲ್ಲಿ ದೊಡ್ಡ ಪೆರುನಾಳ್ ಅಂದರೆ ಬಕ್ರೀದ್. ಅಮ್ಮ ಕರೆದಿದ್ದಾರೆ. ಎಂದಿನಂತೆ ಹೋಗಲಾಗದೆ ಕೂತಿದ್ದೇನೆ.ನನಗೆ ಯಾವಾಗಲೂ ಹೀಗೆಯೇ .ಅಲ್ಲಿ ಹೋಗಲಾರೆ.ಇಲ್ಲಿ ಇರಲಾರೆ. ಕವಿತೆ ಬೇಕಾದರೆ ಬರೆಯಬಲ್ಲೆ! ಸುಮಾರು ೨೨ ವರ್ಷಗಳ ಹಿಂದೆ ಹಬ್ಬಕ್ಕೆ ಹೋಗದೆ ಕಳ್ಳ ಕೆಲಸಗಳ ನಡುವೆ ಬರೆದ ಕವಿತೆಯನ್ನು ಇಲ್ಲಿ ಪೋಸ್ಟ್ ಮಾಡುತ್ತಿರುವೆ.
ಹಜ್ಹಬ್ಬದ ನೆನಪು….
ಸಣ್ಣಗೊಮ್ಮೆ ಹಿಡಿದ ಜಡಿ ಜರ್ರೋಮಳೆ
ಬಾಳೆಯೆಲೆ ಮೇಲೆ ಹಜ್ಜಿಯಬ್ಬದ ಹನಿ
ಬತ್ತಲು ಬಚ್ಚಲ ಮಾಡಿನಿಂದಿಳಿದ ಮೋಡ ಬಿಸಿಲುಕೋಲು
ಹಬೆದುಂಬಿ ಮೈಮಿರುಗಿ ಹಜ್ಜಿಯಬ್ಬದ
ನೀರು ಸೋಕುವಲ್ಲೆಲ್ಲ ಉಮ್ಮಗುನುಗುನಿಸಿ
ಪೆರುನಾಳಿನ ಹಾಡು.
ಬೆನ್ನೊರಸಿ ಉಡಿದಾರಕ್ಕೆ
ಮುಂಡುಡಿಸಿ, ಕಿವಿ ಎಳೆದು ಬೈತಲೆಯಲ್ಲಿ
ಬೆರಳಿರಿಸಿ ಪಾವಲಿ ಉಡಿತುಂಬಿ,
ಅತ್ತರು ಪೂಸಿ ಕಿವಿಯಲ್ಲಿ ಊದಿ, ದಾರಂದದ
ಮುಂದೆ ತಂಗಿ ‘ಅಲೀಮಾ’ ಚಾಚಿ ಕೈಚಾಚಿ
ಕೈಯೆಲ್ಲ ಮದರಂಗಿ ಕೆಂಪು ಹಕ್ಕಿ, ಕಿವಿಯೆಲ್ಲ ಬೆಳ್ಳಿ
ಎಸಳೆಲ್ಲ ಝಮಕಿ,ಅಂಗಳದ ಹಸಿಮಣ್ಣ ಮೇಲೆ ಧುಮುಕಿ.
ಬಿಳಿ ಮಲ್ಲಿಗೆಯ ಮಾಲೆ ಮುಡಿಯ ಮೇಲೆ.
ಹುಡುಗ ಕಾಡೊಳಗೆ ಅಲ್ಲಾಕರೆದಂತೆ ಪಳ್ಳಿಗೆ
ಬಾಪಾನ ಹಿಂದೆ, ‘ಅಲ್ಲಾಹು ಅಕ್ಬರ್’
ಕಾಡೊಳಗೆ ಕರೆದಂತೆ, ಹನಿಯೊಳಗೆ ಕರೆದಂತೆ
ಕಾಡಿನೊಳಗಡೆ ಕರೆದಂತೆ ಮಗನ ಅಲ್ಲಾನ ಕಡೆಗೆ
ಅಲ್ಲಿ ಮರಳು ಗಾಡಿನ ‘ಕಹಬಾ’ದ
ಅತ್ತಕಡೆ ಇಬ್ರಾಹಿಂ ನೆಬಿ ಮಗ ಇಸ್ಮಾಯೀಲನ
ಕೊರಳ ಅಲ್ಲಾಹನಿಗೆ ಕೋಯ್ದು ಕೊಡುವಂತೆ,
ದಿಕರಿಡುತ್ತವೆ ಕಿವಿಯ ಒಳಗೆ ಕಾಡನಡುವೆ.
ಉಮ್ಮನ ಪಾವಲಿ ಮುಂಡುಡಿಯಲ್ಲಿ ಕಣ್ಣ ತಬ್ಬುತ್ತದೆ.
ಕರಿದ ನೇಂದ್ರ ಕಾಯಿ ನಾಲಗೆಯಪ್ಪುತ್ತದೆ
ಸುಯ್ಯೋಹನಿಯಲ್ಲಿ ಕಿವಿದುಂಬುತ್ತದೆ, ಮರದ ಹನಿಕಣ್ಣು
ತಂಗಿಯ ಕಿವಿಯ ಬೆಳ್ಳಿ ತೊಟ್ಟಿಕ್ಕುತ್ತದೆ. ಬಾಪಾನ ಹಿಂದೆ
ಅಲ್ಲಾನ ಕಡೆಗೆ.
ಇರುವುದೊಂದೇ ಬಾಪಾ, ಹಿಂಬಾಲಿಸಲಿಕ್ಕಿರುವುದೊಂದೇ ಬಾಪಾ
ಈ ಇಷ್ಟು ಮಳೆಯ ಕಾಡಿನಲ್ಲಿ ಹನಿವ ಹನಿಯೆಲ್ಲ
ಬಾಪಾ ಕರೆದಂತೆ, ನೆಲವೆಲ್ಲ ಪಸೆಯಿಡಿದು ಜಾರುಜಾರಿಗೆ
ದೂರ ಸರಿದಂತೆ ಬಾಪಾ ಕಾಲುರೋಡಿನೊಳಗೆ
ಅಲ್ಲಾನ ಕಡೆಗೆ.
ಹರಿದ ತೊರೆ ಅಡಿಕೆ ಪಾಲದ ಮೇಲೆ ಬಾಪಾ
ನಡೆದಂತೆ ನಡುಗುತ್ತಾ ಹುಡುಗ,
ನಡುಗುತ್ತ ಅಡಿಗಡಿಗೆ ಅಲ್ಲಾನ ಕರೆಯುತ್ತ ಹುಡುಗ.
ಕಣ್ಣ ಅಗಲಕ್ಕೆಲ್ಲ ಅಲ್ಲಾ, ನದಿ ಹರಿದಂತೆ ಕೆಳಗೆ
ಅಲ್ಲಾ, ಆಕಾಶವೆಲ್ಲ ಕರಿದುಂಬಿ ಹರಿದಂತೆ
ಅಲ್ಲಾ, ಮರದಮರದ ತೊಗಟಿ ಕರಿಗಟ್ಟಿ ಬೇರು
ಪೊದೆಯೆಲ್ಲ ನೀರು ಮುಂಡು ತೊಯ್ಸಿಸಿಕೊಂಡು
ನಡೆವ ಹುಡುಗನೆದೆಯಲ್ಲೆಲ್ಲ ಅಲ್ಲಾನ ಕಡೆಗೆ ನಡೆವ ಬಾಪಾ.
ಹರಿವ ತೊರೆದಾಟಿ ಮುಳಿ ಹುಲ್ಲ ನೆಲದಲ್ಲಿ
ಕಾಲೊಸರುವಲ್ಲೆಲ್ಲಾ ಅಕ್ಕಿ ಹಿಟ್ಟಿನ ಮೇಲೆ
ನಾದಿದಂತೆ ಅಲ್ಲಾನ ಹೆಜ್ಜೆ.
ಪಳ್ಳಿಯ ಪಡಿಯೇರಿದ
ಮೇಲೆ ಬಾಪಾ ಅಲ್ಲಾನ ಮುಂದೆ ‘ಅಲ್ಲಾಹು ಅಕ್ಬರ್’
ಹುಡುಗ ನುಡಿ ತುಂಬಿ ಹರಿವ ಪಾವಲಿಯಲ್ಲೆಲ್ಲ
ಉಮ್ಮ ಅಳುವಂತೆ ಪಳಿಯಿಂದೆಲ್ಲಿಂದಲೋ ಅಲ್ಲಾ
ಕರೆದಂತೆ ‘ಕಹಬಾ’ದ ಕಡೆಗೆ, ಕಾಡಿನಲ್ಲೆಲ್ಲೋ
ಬಾಪಾ ಪುಟ್ಟ ಹುಡುಗನ ಬಿಟ್ಟು ನಡೆದಂತೆ ಎಲ್ಲೋ
‘ಅಲ್ಲಾಹು ಅಕ್ಬರ್’.