The Mysore Post

Thursday December 27, 2007

ಒಬ್ಬ ಐರಿಷ್ ಹುಡುಗನ ಅಲೆದಾಟ

white-blossom-tree.jpg

ಕತೆಯ ಆಶೆಯನ್ನು ಬಿಟ್ಟು ಮತ್ತೆ ಸುಮ್ಮನೇ ತಿರುಗಾಟ ಶುರು ಮಾಡಿದ್ದೆ. ಏನು ಬರೆಯಲು ಹೊರಟರೂ ಮತ್ತೆ ಅದೇ ಬಾಲ್ಯಾಕಾಲದ ಹಾವಳಿ ಜಾಸ್ತಿಯಾಗಿ. ಹಳೆಯದ್ದನ್ನೆಲ್ಲ ಮೂಟೆಕಟ್ಟಿ ಅಟ್ಟದಲ್ಲಿಟ್ಟು ಇಲ್ಲಿಗೆ ಬಂದರೂ ಬಾಲ್ಯದ ಕಾಟ ಕಡಿಮೆಯಾಗಲಿಲ್ಲವಲ್ಲಾ ಎಂದು ನಿಟ್ಟುಸಿರು ಬಿಡುತ್ತಿದ್ದೆ. ಊರಲ್ಲಿರುವ ಮಡದಿ ಕಾಗದ ಬರೆದು `ನೀನು ಗೊತ್ತೇ ಇಲ್ಲದ ಅಪರಿಚಿತ ಅಂತ ಅನ್ನಿಸುತ್ತಿದೆ. ನೀನು ಬೇರೆ ಯಾರೋ ಗಂಡಸು ಅಂತ ಅನ್ನಿಸಿ ಹೆದರಿಕೆಯಾಗುತ್ತಿದೆ. ನಿಜಕ್ಕೂ ನೀನು ಯಾರೂ ? ನನಗೆ ಯಾಕೋ ನೀನು ಎಲ್ಲೋ ಇರುವ ಬೇರೆ ಯಾರೋ ಮನುಷ್ಯ ಅಂತ ಅಳುಬರುತ್ತಿದೆ’ ಅಂತೆಲ್ಲಾ ಬರೆದಿದ್ದಳು. ಅವಳಿಗೆ ಸಮಾಧಾನ ಮಾಡಲು ಹೋಗದೆ ನಾನೂ ದುಷ್ಟನಂತೆ ಉತ್ತರ ಬರೆದಿದ್ದೆ. ಆಮೇಲೆ ನನ್ನೊಳಗೇ ಸಂಕಟಪಟ್ಟಿದ್ದೆ. ಹೆಂಡತಿಯೊಬ್ಬಳ ಹೆದರಿಕೆಗಳು, ಗಂಡನಾದವನ ದಿಕ್ಕು ದೆಸೆಯಿಲ್ಲದ ತಿರುಗಾಟ… ಇದರ ನಡುವೆಯೇ ಕಳೆದು ಹೋಗುತ್ತಿರುವ ಕಾಲ. ನಾವು ಇದನ್ನೆಲ್ಲ ಮರೆತು ಮಕ್ಕಳ ಹಾಗೆ ಮತ್ತೆ ಕೂಡಿಕೊಳ್ಳುವುದು ಹೇಗೆ ಎಂದು ಯೋಚಿಸುತ್ತಿದ್ದೆ.

ಷಿಲ್ಲಾಂಗಿನಲ್ಲಿ ಈಗ ಚಳಿಯ, ಬೆಳದಿಂಗಳಿನ ಸಮಯ. ಎಲ್ಲರೂ ಬೆಚ್ಚಿನ ಬಟ್ಟೆಗಳನ್ನು ಹಾಕಿಕೊಂಡು ಬೇರೆಯದೇ ತರಹ ಕಾಣಿಸುತ್ತಿದ್ದಾರೆ. ಚಿರಾಪುಂಜಿಯ ಕಿತ್ತಳೆಯ ಹಣ್ಣು ಮಾರುಕಟ್ಟೆಗೆ ಬಂದಿದೆ. ಎಲ್ಲರೂ ಮನೆಗಳನ್ನು ತೊಳೆದು ಸಿಂಗರಿಸಲು ತೊಡಗಿದ್ದಾರೆ. ಎಲ್ಲರೂ ಕ್ರಿಸ್‌ಮಸ್ ಹಬ್ಬಕ್ಕಾಗಿ ಕಾಯುತ್ತಿದ್ದಾರೆ

ಈ ನಡುವೆ ಓವನ್ ಓ’ ಸಲ್ಲಿವನ್ ಎಂಬ ಅಯರ್ಲೆಂಡ್‌ನ ಗೆಳೆಯ ಕಾಗದ ಬರೆದಿದ್ದಾನೆ. ಸೈಕಲ್ಲು ಹತ್ತಿ ವಿಶ್ವವನ್ನೆಲ್ಲ ಸುತ್ತುತ್ತಿರುವ ಈತ ಈಗ ಯೂರೋಪಿನ ಗಡಿಯಲ್ಲಿರುವ ಟರ್ಕಿ ಗೆ ತಲುಪಿ ಅಲ್ಲಿಂದ ಕಾಗದ ಕಳಿಸಿದ್ದಾನೆ. ಕ್ರಿಸ್‌ಮಸ್ ಹಬ್ಬಕ್ಕೆ ಸರಿಯಾಗಿ ಆತ ಅಟ್ಲಾಂಟಿಕ್ ಕಡಲ ತೀರದಲ್ಲಿರುವ ತನ್ನ ಹಳ್ಳಿಯಲ್ಲಿ ತಂದೆ ತಾಯಿಯ ಜೊತೆ ಕಾಲ ಕಳೆಯುತ್ತಾನೆ. ಈಗ ನಾನು ಯೂರೋಪಿನ ಹೊಸ್ತಿಲಲ್ಲಿ ನಿಂತಿದ್ದೇನೆ ಎಂದು ಆತ ಬರೆದಿದ್ದಾನೆ. ಇಂಗ್ಲಿಷಿನಲ್ಲಿ ಈತನ ಹೆಸರು ಓವೆನ್ ಆಂತ. ಐರಿಷ್ ಭಾಷೆಯಲ್ಲಿ ಅದನ್ನು ಓಐನ್ ಅಂತ ಬರೆಯುತ್ತಾರಂತೆ.

ಈತನನ್ನು ನಾನು ನೋಡಿದ್ದು ಒಂದು ತಮಾಷೆಯ ಸಂದರ್ಭ. ಒಂದು ವರ್ಷದ ಹಿಂದೆ ಶಿಲ್ಲಾಂಗಿನ ಅಸ್ಸಾಮಿ ಹೆಂಗಸೊಬ್ಬಳ ಮುರುಕು ಹೋಟೆಲಲ್ಲಿ ಕುಳಿತುಕೊಂಡು ಈತ ಹಾಲಿಲ್ಲದ ಟೀ ಕುಡಿದುಕೊಂಡು ಸಿಗರೇಟು ಸೇದಿಕೊಂಡು ಹೊರಗೆ ನೋಡುತ್ತಿದ್ದ. ಆಗ ಬೆಳ್ಳಗಿನ ಹೂ ಬಿಡುವ ಪ್ಲಂ ಮರಗಳು ಎಲ್ಲ ಕಡೆ ಅರಳಿಕೊಂಡು ನಿಂತಿದ್ದವು. ನಾನೂ ಟೀ ಕುಡಿದುಕೊಂಡು ಈತನನ್ನೇ ಗಮನಿಸುತ್ತಿದ್ದೆ. ಬೆಳ್ಳಗ್ಗೆ ಎತ್ತರಕ್ಕೆ ಲಕ್ಷಣವಾಗಿ ಇದ್ದ. ಜೊತೆಗೆ ವಿಲಕ್ಷಣವಾಗಿ ಮೂಗಿಗೊಂದು ನತ್ತು ಸಿಕ್ಕಿಸಿಕೊಂಡಿದ್ದ. ನನಗೆ ಅದನ್ನು ನೋಡಿ ನಗುಬರುತ್ತಿತ್ತು. ಅಸ್ಸಾಮಿ ಹೆಂಗಸು ಹೋಟೆಲ್ಲಿನ ಗೋಡೆಯಲ್ಲಿ ಜಡೆಸ್ವಾಮಿಯೊಬ್ಬನ ಫೋಟೋ ತೂಗುಹಾಕಿ ಅದಕ್ಕೆ ಊದು ಬತ್ತಿ ಹಚ್ಚಿ ಇಟ್ಟಿದ್ದಳು. ಈತ ಎದ್ದು ನನ್ನ ಬಳಿ ಬಂದು ಆ ಫೋಟೋ ತೋರಿಸಿ ಇದು ಯಾವ ದೇವರು ಅಂತ  ಕೇಳಿದ. ನನಗೂ ಗೊತ್ತಿರಲಿಲ್ಲ. `ಕ್ಷಮಿಸುಗೊತ್ತಿಲ್ಲ’ ಅಂತ ಹೇಳಿದೆ. ಆಮೇಲೆ ನಾವು ಗೆಳೆಯರಾದೆವು. ನಮ್ಮ ಮನೆಗೆ ಬಂದು ಊಟ ಮಾಡಿ ಕುಡಿದು ಊರಿನಿಂದ ಬಂದ ನೆಂಟನಂತೆ ಕ್ಷೇಮ ಸಮಾಚಾರ ಮಾತಾಡಿಕೊಂಡು ಹತ್ತಿರವಾದೆವು. ಹೋಗಲಿ ಬಿಡು ಮೂಗಿಗೆ ನತ್ತು ಯಾಕೆ ಹಾಕಿಕೊಂಡಿದ್ದೀಯಾ ಅಂತ ಕೇಳಿದೆ. ಎಲ್ಲರೂ ಕುತೂಹಲ ಪಡಲಿ, ಮಕ್ಕಳು ನಗಾಡಲಿ ಅಂತ ಹಾಕಿರುವೆ’ ಅಂತ ಹೇಳಿದ.

ಈತ ಹುಟ್ಟಿದ್ದು ಐರ್ಲೆಂಡಿನಲ್ಲಿ ನಲ್ಲಿ. ಕೆಲಸ ಮಾಡುವುದು ಆಸ್ಟ್ರೇಲಿಯಾದಲ್ಲಿ. ಒಂದು ವರ್ಷ ಕೆಲಸ ಮಾಡಿ ಖರ್ಚು ಮಾಡದೆ ಹಣ ಉಳಿಸಿ ಇನ್ನೊಂದು ವರ್ಷ ರಜೆ ಹಾಕಿ ಲೋಕ ಸುತ್ತುತ್ತಾನೆ. ಆಸ್ಟ್ರೇಲಿಯಾದಿಂದ ಹಾಂಕಾಂಗ್‌ಗೆ ಹೋಗಿ, ಅಲ್ಲಿಂದ ಬಿಹಾರ ಸುತ್ತಿ, ಕಲಕತ್ತಾಗೆ ಬಂದು ಅಲ್ಲಿಂದ ಬಾಂಗ್ಲಾದೇಶದೊಳಕ್ಕೆ ನುಸುಳಿ ತ್ರಿಪುರಾದ ಗಡಿಯಲ್ಲಿ ಪುನಃ ಭಾರತದೊಳಕ್ಕೆ ಬಂದು ಬಸ್ಸು ಹತ್ತಿ ಶಿಲ್ಲಾಂಗಿಗೆ ಬಂದಿದ್ದ. ಈ ಊರಲ್ಲಿ ಐರಿಷ್ ಪಾದ್ರಿಗಳ ತುಂಬಾ ಗೋರಿಗಳಿವೆ ನೋಡಿಕೊಂಡು ಹೋಗೋಣ ಅಂತ ಬಂದೆ ಅಂತ ಹೇಳಿದ್ದ. ನಮ್ಮ ಜೊತೆ ಎರಡು ದಿನ ಪ್ರೀತಿಯಿಂದ ಇದ್ದು ಆಮೇಲೆ ಪುನಃ ನೇಪಾಳಕ್ಕೆ ಹೊರಟು ಹೋದ. ನೇಪಾಳದಿಂದ ಕಾಗದ ಬರೆದಿದ್ದ. ಅಲ್ಲಿ ಒಂದು ಹಳೆಯ ಸೈಕಲ್ಲು ಕೊಂಡು ಅದನ್ನು ಹತ್ತಿ ಭಾರತ ದಾಟಿ ಪಾಕಿಸ್ತಾನ, ಕಾಬೂಲ್, ಇರಾನ್‌ಗಳನ್ನು ಹಾದು ಈಗ ಟರ್ಕಿಯ ಬಳಿಯಿಂದ ಇನ್ನೊಂದು ಕಾಗದ ಬರೆದಿದ್ದಾನೆ.

`ಯಾಕೆ ಮಾರಾಯ ಇಷ್ಟೊಂದು ಸುತ್ತುತ್ತೀಯಾ?’ ಅಂತ ಕೇಳಿದ್ದೆ. ಸುಮ್ಮನೇ ಕಣ್ಣು ಮಿಟುಕಿಸಿದ್ದ. ನೋಡಿದರೆ ಆತನಿಗೆ ನನಗಿಂತ ಸಣ್ಣ ವಯಸ್ಸು. ಮದುವೆಯಾದ ಮೇಲೆ ಸುತ್ತುವುದನ್ನ ನಿಲ್ಲಿಸುತ್ತೇನೆ ಅಂತ ನನ್ನ ಮಡದಿಯನ್ನು ನೋಡಿ ಚೇಷ್ಟೆ ಮಾಡಿದ್ದ. ನಿಮ್ಮ ದೇಶದ ಕವಿ ಏಟ್ಸ್ ಗೊತ್ತಾ ಅಂತ ಕೇಳಿದ್ದೆ. ಗೊತ್ತು ಓದಿಲ್ಲ ಅಂತ ಹೇಳಿದ್ದ. ನನಗೆ ಕವನ ಬರೆಯುವುದು ಹೇಗೆ ಅಂತ ಹೇಳಿಕೊಡು ಅಂತ ಕೇಳಿದ್ದೆ. ತಮಾಷೆ ಮಾಡಬೇಡ ಅಂತ ಹೇಳಿದ್ದೆ. ನಾನು ನನ್ನ ಹೆಂಡತಿ ಇಬ್ಬರೂ ಸೇರಿ ನಾವು ಪ್ರೇಮಿಸಿದ್ದು ಮದುವೆಯಾಗಿದ್ದು ಎಲ್ಲವನ್ನೂ ಆತನಿಗೆ ಕತೆ ಹೇಳುವ ಹಾಗೆ ಹೇಳಿದ್ದೆವು. `ನನಗೆ ಆತ ತುಂಬಾ ಇಷ್ಟ ಆದ. ಸ್ಮಾರ್ಟ್ ಇದ್ದಾನೆ’ಅಂತ ಆಕೆ ನನ್ನ ಕಿವಿಯಲ್ಲಿ ಹೇಳಿದ್ದರು. ಅದನ್ನು ನಾನು ಅವನಿಗೆ ಹೇಳಿ ಅವನು ಕೆಂಪಗಾಗಿ ಬಿಟ್ಟಿದ್ದ.

ನಾವೆಲ್ಲಾ ಹೀಗೆಲ್ಲಾ ಸುತ್ತುವುದು ಯಾವಾಗ ? ನನ್ನ ಗೆಳೆಯನೊಬ್ಬ ಮೊನ್ನೆ ಬಾಬಾ ಬುಡನ್‌ಗಿರಿಗೆ ಹೋಗಬೇಕಿದ್ದವನು ಅಯ್ಯೋ ಅಲ್ಲಿ ಚಳಿ ಅಂತ ಹೋಗದೆ ಮಂಗಳೂರಿನಲ್ಲಿ ಮನೆಯಲ್ಲೇ ಉಳಿದುಬಿಟ್ಟಿದ್ದ.
ಯಾಕೋ ಈ ಸಲ ತುಂಬಾ ಜಾಸ್ತಿಯೇ ಬರೆದೆ. ನಿಲ್ಲಿಸುವೆ.

3 Comments »

  1. Nanna snEhitanobba iMthavanobbana bagge hELi naanU haagE aagtIni aMdidda hELi aidu varsha aaythu innU haagagilla. yaake hIgaagutte? Is it only because we want to play safe?

    Love
    Siri

    Comment by Siri — Thursday October 30, 2008 @ 3:44 pm | Reply

  2. ನಮಸ್ತೆ….ಅಮ್ಮನ ಹಬ್ಬಕ್ಕೆ ಆಮಂತ್ರಿಸಲು ನಿಮ್ಮ ಮನೆಗೆ ಬಂದೆ.. ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ.. ವಿವರಗಳಿಗೆ ನನ್ನ ಬ್ಲಾಗ್ http://minchulli.wordpress.com ನೋಡಿ. ಮರೆಯದೆ ಬನ್ನಿ… ನಿಮ್ಮ ಆಪ್ತರಿಗೆಲ್ಲ ಈ ವಿಚಾರ ಹೇಳಿ ಸಾಧ್ಯವಾದರೆ ಕರೆದುಕೊಂಡು ಬನ್ನಿ.

    ಶುಭವಾಗಲಿ,
    - ಶಮ, ನಂದಿಬೆಟ್ಟ

    Comment by minchulli — Tuesday March 3, 2009 @ 12:29 pm | Reply

  3. ವ್ಹಾ! ರಶೀದ್ ಭಾಯ್… ನಾನು ನಿಮ್ಮ ಬರಹವನ್ನು ಮೊದಲು ಓದಿದ್ದು ರೂಮಿಯ ಕವನಗಳು… ಪ್ರಾಣ ಪಕ್ಷಿಯೆಂಬ ಕತೆ, ಉದಯವಾಣಿಯ ಅಂಕಣ..ಈ ತನಕದ ಕತೆಗಳು… ಇಷ್ಟವಾಗುತ್ತಾ ಹೋದಿರಿ. ಮತ್ತೆ ಇಲ್ಲೊಂದು ಅವಕಾಶ. ಧನ್ಯವಾದಗಳು

    Comment by ಪ್ರಸಾದ್.ಜಿ — Saturday July 4, 2009 @ 10:52 pm | Reply


RSS feed for comments on this post. TrackBack URI

Leave a comment

Blog at WordPress.com.